ಚಿತ್ರದುರ್ಗ: ನಾಗರಿಕರಿಗೆ ಗೊತ್ತು ಮಾಡಿದ ಕಾಲಮಿತಿ ಒಳಗೆ ಸೇವೆ ಒದಗಿಸುವುದಕ್ಕಾಗಿ ಸರ್ಕಾರ ಕರ್ನಾಟಕ ನಾಗರಿಕರಿಗೆ ಸೇವೆಗಳ ಖಾತರಿ ಅಧಿನಿಯಮವನ್ನು ಜಾರಿಗೊಳಿಸಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ರಾಜ್ ಇಲಾಖೆ ಪ್ರಧಾನ ಕಾರ್ಯದರ್ಶಿ ಹಾಗೂ ಆಡಳಿತ ತರಬೇತಿ ಸಂಸ್ಥೆಯ ಮಹಾನಿರ್ದೇಶಕಿ ಡಾ.ಅಮಿತಾ ಪ್ರಸಾದ್ ತಿಳಿಸಿದರು.
ಜಿಲ್ಲಾ ಪಂಚಾಯಿತಿ ಕಚೇರಿಯಲ್ಲಿ ಕರ್ನಾಟಕ ನಾಗರಿಕ ಸೇವೆಗಳ ಖಾತರಿ ಮಸೂದೆ ಕುರಿತು ಅನುಷ್ಠಾನದ ಬಗ್ಗೆ ಇಲಾಖೆ ಅಧಿಕಾರಿಗಳಿಗೆ ಆಯೋಜಿಸಿದ್ದ ಎರಡು ದಿನಗಳ ಸಾಮರ್ಥ್ಯಾಭಿವೃದ್ಧಿ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು.
ಅಧಿಕಾರಿಗಳು ನಾಗರಿಕರಿಗೆ ಸೇವೆಗಳ ಖಾತರಿ ಅಧಿನಿಯಮದಲ್ಲಿ ಒಳಗೊಂಡಿರುವ ಎಲ್ಲ ಮಾಹಿತಿ ಪಡೆದುಕೊಳ್ಳಬೇಕು. ನಿಗದಿಪಡಿಸಿದ ಅವಧಿ ಒಳಗೆ ನಾಗರಿಕರಿಗೆ ಕಾಲಬದ್ಧ ಸೇವೆಗಳನ್ನು ನೀಡುವ ಸಂಸ್ಕೃತಿಯನ್ನು ಬೆಳೆಸಿಕೊಳ್ಳುವ ಉದ್ದೆೀಶ ಮತ್ತು ಆಶಯವನ್ನು ಹೊಂದಿರುವ ಅಧಿನಿಯಮದಲ್ಲಿ ನಿರ್ದಿಷ್ಟ ಪಡಿಸಲಾಗಿರುವ ಎಲ್ಲ ನಿಯಮಗಳನ್ನು ಅರಿತುಕೊಂಡು ಕಾರ್ಯಾನುಷ್ಠಾನಕ್ಕೆ ತರಬೇಕಾಗುತ್ತದೆ.
ಈ ಬಗ್ಗೆ ಆಯಾ ಇಲಾಖೆಗಳಲ್ಲಿ ಕಾರ್ಯನಿರ್ವಹಿಸುವ ಅಧಿಕಾರಿಗಳು ಹಾಗೂ ಸಿಬ್ಬಂದಿ ನಿಗದಿತ ಅವಧಿ ಒಳಗೆ ನಾಗರಿಕರಿಗೆ ಸೇವಾ ಸೌಲಭ್ಯಗಳನ್ನು ಒದಗಿಸಲು ಸನ್ನದ್ಧರಾಗುವಂತೆ ಅಧಿಕಾರಿಗಳಿಗೆ ತಿಳಿಸಿದರು.
ಬಿಹಾರ ರಾಜ್ಯದಲ್ಲಿ ಈಗಾಗಲೇ ನಾಗರಿಕ ಸೇವೆ ಖಾತರಿ ಕಾಯ್ದೆ ಜಾರಿಯಲ್ಲಿದೆ. ಈಗ ರಾಜ್ಯದಲ್ಲಿ ಏ.2ರಿಂದ ಈ ಕಾಯ್ದೆ ಜಾರಿಗೆ ಬರುತ್ತಿದ್ದು, ಪ್ರಾಯೋಗಿಕವಾಗಿ ರಾಜ್ಯದಲ್ಲಿ ಬೀದರ್, ಧಾರವಾಡ, ಉಡುಪಿ ಹಾಗೂ ಚಿತ್ರದುರ್ಗ ಜ್ಲ್ಲಿಲೆಗಳ ಒಂದೊಂದು ತಾಲ್ಲೂಕುಗಳನ್ನು ತೆಗೆದುಕೊಳ್ಳಲಾಗಿದೆ. ಒಟ್ಟು 11 ಇಲಾಖೆಗಳಲ್ಲಿ 151 ಸೇವೆಗಳ ಪಟ್ಟಿ ಮಾಡಲಾಗಿದೆ ಎಂದು ತಿಳಿಸಿದರು.
ಜಿಲ್ಲಾಧಿಕಾರಿ ವಿಪುಲ್ ಬನ್ಸಲ್ ಮಾತನಾಡಿ, ಈ ಅಧಿನಿಯಮದ ಅನುಷ್ಠಾನದ ಕುರಿತು ಗ್ರಾಮೀಣ, ತಾಲ್ಲೂಕುಮಟ್ಟದಲ್ಲಿ ಕಾರ್ಯ ನಿರ್ವಹಿಸುವಂತಹ ಅಧಿಕಾರಿ, ನೌಕರರು ಹೆಚ್ಚು ಪರಿಣಾಮಕಾರಿಯಾಗಿ ಕೆಲಸ ನಿರ್ವಹಿಸುವಂತೆ ತಿಳಿಸಿದರು. ಮಾ 1ರಿಂದ ಚಿತ್ರದುರ್ಗ ತಾಲ್ಲೂಕಿನಲ್ಲಿ ಪ್ರಾರಂಭಿಕವಾಗಿ ಜಾರಿಗೆ ತರಲಾಗುವುದು ಎಂದು ತಿಳಿಸಿದರು. ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯ ನಿರ್ವಹಣಾ ಅಧಿಕಾರಿ ಎನ್. ಜಯರಾಮ್, ಜಿಲ್ಲಾ ಪಂಚಾಯ್ತಿ ಅಧ್ಯಕ್ಷ ಟಿ. ರವಿಕುಮಾರ್ ಉಪಸ್ಥಿತರಿದ್ದರು.
ಕಾರ್ಯಾಗಾರದಲ್ಲಿ ಆಡಳಿತ ತರಬೇತಿ ಸಂಸ್ಥೆಯ ಸಂಪನ್ಮೂಲ ಅಧಿಕಾರಿ ಎಚ್.ಪಿ. ಶಿವಶಂಕರ್ ಹಾಗೂ ಸಮನ್ವಯಾಧಿಕಾರಿ ಜಿ.ಎಂ. ಸರ್ವೇಶ್ವರ್ ಕಾರ್ಯಾಗಾರದಲ್ಲಿ ನಾಗರಿಕ ಸೇವಾಖಾತ್ರಿ ಅಧಿನಿಯಮದ ಬಗ್ಗೆ ಮಾಹಿತಿ ವಿವರ ನೀಡುವರು.
ಜಿಲ್ಲಾ ಪಂಚಾಯಿತಿ ಯೋಜನಾ ನಿರ್ದೇಶಕ ಲಕ್ಷ್ಮೀನಾರಾಯಣ ವಂದಿಸಿದರು. ಕಾರ್ಯಾಗಾರದಲ್ಲಿ ಅಪರ ಜಿಲ್ಲಾಧಿಕಾರಿ ಎ.ಎಸ್. ನಿರ್ವಾಣಪ್ಪ, ಜಿ.ಪಂ. ಉಪ ಕಾರ್ಯದರ್ಶಿ ರುದ್ರಪ್ಪ, ಜಿಲ್ಲಾ ತರಬೇತಿ ಸಂಸ್ಥೆ ಪ್ರಾಂಶುಪಾಲಜಿ.ಸಿ. ಮಲ್ಲಿಕಾರ್ಜುನ್ ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.