ಬೆಂಗಳೂರು: ರಾಜ್ಯ ಒಕ್ಕಲಿಗರ ಸಂಘದ ಬೆಂಗಳೂರು ನಗರ, ಗ್ರಾಮಾಂತರ ಮತ್ತು ರಾಮನಗರ ಕ್ಷೇತ್ರದ ೧೫ ನಿರ್ದೇಶಕರ ಸ್ಥಾನಗಳಿಗೆ ನಡೆದ ಚುನಾವಣೆಯ ಮತಗಳ ಮರು ಎಣಿಕೆಗೆ ಆದೇಶಿಸುವಂತೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ಗುರುವಾರ ವಜಾಗೊಳಿಸಿದೆ.
ಮತ ಎಣಿಕೆಯಲ್ಲಿ ಪಾರದರ್ಶಕತೆ ಕಾಪಾಡಿಲ್ಲ ಎಂದು ಆರೋಪಿಸಿ ಕಣದಲ್ಲಿರುವ ಅಭ್ಯರ್ಥಿ ಡಾ.ಕೆ. ನಾರಾಯಣ್ ಅರ್ಜಿ ಸಲ್ಲಿಸಿದ್ದರು.
ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎ.ಎಸ್. ಬೋಪಣ್ಣ ಅವರಿದ್ದ ಏಕಸದಸ್ಯ ಪೀಠ ಮತ ಎಣಿಕೆ ನಡೆಯುತ್ತಿರುವ ಹಿನ್ನೆಲೆಯಲ್ಲಿ ಮಧ್ಯ ಪ್ರವೇಶಿಸುವುದಿಲ್ಲ. ಫಲಿತಾಂಶ ಹೊರಬಿದ್ದ ನಂತರ ಅಗತ್ಯವಿದ್ದಲ್ಲಿ ಚುನಾವಣಾ ತಕರಾರು ಅರ್ಜಿ ಸಲ್ಲಿಸಬಹುದು ಎಂದು ಅರ್ಜಿದಾರರಿಗೆ ತಿಳಿಸಿದ ಪೀಠ ಅರ್ಜಿಯನ್ನು ವಜಾಗೊಳಿಸಿತು.