ಬೆಂಗಳೂರು: ಆರ್ಯವೈಶ್ಯ ಸಮುದಾಯದ `ಶ್ರೀ ಕಾಶಿ ಅನ್ನಪೂರ್ಣಾ ವಾಸವಿ ಆರ್ಯವೈಶ್ಯ ವೃದ್ಧಾಶ್ರಮ ಮತ್ತು ನಿತ್ಯಾನ್ನಸತ್ರ~ ಸಂಘಟನೆ ಎಲ್ಲ ವರ್ಗದ ಜನರನ್ನು ಒಳಗೊಳ್ಳುವ ಮೂಲಕ ಬೆಳೆಯುತ್ತಿದೆ ಎಂದು ತಮಿಳುನಾಡು ರಾಜ್ಯಪಾಲ ಕೆ. ರೋಸಯ್ಯ ಮೆಚ್ಚುಗೆ ವ್ಯಕ್ತಪಡಿಸಿದರು.
ಸಂಘಟನೆ ನಗರದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಆರ್ಯವೈಶ್ಯ ಸಮಾಜದ ಆರ್ಥಿಕವಾಗಿ ಹಿಂದುಳಿದಿರುವ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ವಿತರಣೆ ಕಾಯಕ್ರಮದಲ್ಲಿ ಮಾತನಾಡಿದ ಅವರು, `ಶಿಕ್ಷಣವು ವ್ಯಕ್ತಿಯ ಜೀವನದಲ್ಲಿ ಅತ್ಯಂತ ಪ್ರಮುಖವಾಗಿರುವ ಹಿನ್ನೆಲೆಯಲ್ಲಿ ಸಂಘಟನೆಯು ವಿದ್ಯಾರ್ಥಿ ವೇತನ ನೀಡಲು ಮುಂದಾಗಿರುವುದು ಉತ್ತಮ ಕಾರ್ಯ~ ಎಂದರು.
ಸರ್ಕಾರದ ಶೈಕ್ಷಣಿಕ ಯೋಜನೆಗಳ ಫಲಾನುಭವಿಗಳಲ್ಲದವರು ಇಂಥ ಕಾರ್ಯಕ್ರಮಗಳಿಂದ ಲಾಭ ಪಡೆದುಕೊಳ್ಳಬಹುದು ಎಂದು ಹೇಳಿದರು.ಇಂಧನ ಸಚಿವೆ ಶೋಭಾ ಕರಂದ್ಲಾಜೆ ಮಾತನಾಡಿ, ರಾಜ್ಯದಲ್ಲಿ ಕೇವಲ ಆರು ಲಕ್ಷದಷ್ಟಿರುವ ಆರ್ಯವೈಶ್ಯ ಸಮುದಾಯ ರಾಜಕೀಯದಲ್ಲಿ ಇನ್ನೂ ಹೆಚ್ಚು ತೊಡಗಿಸಿಕೊಳ್ಳಬೇಕು ಎಂದು ಕರೆ ನೀಡಿದರು. ಸಮುದಾಯದ ಅಭಿವೃದ್ಧಿಗೆ ಅಗತ್ಯ ಕ್ರಮ ತೆಗೆದುಕೊಳ್ಳಲು ಸರ್ಕಾರ ಬದ್ಧವಾಗಿದೆ ಎಂದರು.
ಶೈಕ್ಷಣಿಕ ಸಾಧನೆಗಾಗಿ ಡಿ.ಎಸ್. ಷಣ್ಮುಖ ಮತ್ತು ಹರ್ಷಿಣಿ ಅವರಿಗೆ ರೋಸಯ್ಯ ಅವರು ಚಿನ್ನದ ಪದಕ ನೀಡಿ ಸನ್ಮಾನಿಸಿದರು. ನಗರದ ಸಾಯಿ ಗೋಲ್ಡ್ ಪ್ಯಾಲೇಸ್ ಮಾಲೀಕ ಟಿ.ಎ. ಶರವಣ ಇದೇ ಸಂದರ್ಭದಲ್ಲಿ ಸಂಘಟನೆಯ ಚಟುವಟಿಕೆಗಳಿಗೆ ವಿನಿಯೋಗಿಸಲು 30 ಲಕ್ಷ ರೂಪಾಯಿ ದೇಣಿಗೆ ನೀಡಿದರು.
ಮಾಜಿ ಸಚಿವ ಎಸ್.ಎನ್. ಕೃಷ್ಣಯ್ಯ ಶೆಟ್ಟಿ, ರಾಷ್ಟ್ರೀಯ ಶಿಕ್ಷಣ ಸಮಿತಿ ಟ್ರಸ್ಟ್ನ ಅಧ್ಯಕ್ಷ ಎಂ.ಕೆ. ಪಾಂಡುರಂಗ ಶೆಟ್ಟಿ, ಸಂಘಟನೆ ಅಧ್ಯಕ್ಷ ಜಕ್ಕ ನಾಗಭೂಷಣಂ ಮತ್ತಿತರರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.