ಠಾಣೆ, ಮಹಾರಾಷ್ಟ್ರ (ಐಎಎನ್ಎಸ್): ಮಹಾರಾಷ್ಟ್ರ ರಾಜ್ಯ ಸಾರಿಗೆ ಸಂಸ್ಥೆಗೆ (ಎಂಎಸ್ಆರ್ಟಿಸಿ) ಸೇರಿದ ಬಸ್ಸೊಂದು ಮಾಳ್ಶೊಜ್ ಘಾಟ್ನಲ್ಲಿ 400 ಅಡಿ ಆಳದ ಕಂದಕಕ್ಕೆ ಉರುಳಿದ ಪರಿಣಾಮ 27 ಮಂದಿ ಸಾವನ್ನಪ್ಪಿ 18 ಜನರು ಗಾಯಗೊಂಡ ಘಟನೆ ಗುರುವಾರ ಬೆಳಿಗ್ಗೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಬೆಳಿಗ್ಗೆ ಸುಮಾರು 10:30ರ ವೇಳೆಗೆ ಈ ದುರ್ಘಟನೆ ನಡೆದಿದೆ.
‘ಪ್ರಾಥಮಿಕ ತನಿಖೆಯ ಪ್ರಕಾರ, ಕಡಿದಾದ ತಿರುವಿನಲ್ಲಿ ಚಾಲಕ ನಿಯಂತ್ರಣ ಕಳೆದುಕೊಂಡ ಪರಿಣಾಮ 45 ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಬಸ್ ಕಂದಕಕ್ಕೆ ಉರುಳಿದೆ’ ಎಂದು ಠಾಣೆ ಗ್ರಾಮಾಂತರ ಪೊಲೀಸ್ ಠಾಣೆಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಠಾಣೆ ಹಾಗೂ ಪುಣೆಯ ಪೊಲೀಸ್ ಹಾಗೂ ಅಗ್ನಿ ಶಾಮಕ ಪಡೆಯ ಸಿಬ್ಬಂದಿ ಘಟನಾ ಸ್ಥಳಕ್ಕೆ ಧಾವಿಸಿದೆ. ರಕ್ಷಣಾ ಕಾರ್ಯದಲ್ಲಿ ಸ್ಥಳೀಯ ಗ್ರಾಮಸ್ಥರು ಕೈಜೋಡಿಸಿದ್ದಾರೆ.
ಗಾಯಾಳುಗಳನ್ನು ಮುರ್ಬಾದ್ ಹಾಗೂ ಠಾಣೆಯಲ್ಲಿರುವ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ. ಸಾವಿನ ಸಂಖ್ಯೆ ಏರಿಕೆಯಾಗುವ ಸಾಧ್ಯತೆಗಳಿವೆ ಎಂದೂ ಪೊಲೀಸರು ಹೇಳಿದ್ದಾರೆ.