ಬೆಂಗಳೂರು: ಕನ್ನಡ ಭಾಷೆಗೆ ಮತ್ತು ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಸಾಹಿತಿ ಡಾ.ಚಂದ್ರಶೇಖರ ಕಂಬಾರ ಅವರಿಗೆ ಅಗೌರವ ತೋರಿರುವ ಬೆಳಗಾವಿ ಮಹಾನಗರ ಪಾಲಿಕೆ ಮೇಯರ್ ಮಂದಾ ಬಾಳೆಕುಂದ್ರಿ ಮತ್ತು ಸದಸ್ಯರ ವಿರುದ್ಧ ಕಠಿಣ ಕ್ರಮಕೈಗೊಳ್ಳಬೇಕು ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ `ಮುಖ್ಯಮಂತ್ರಿ~ ಚಂದ್ರು ಮಂಗಳವಾರ ಇಲ್ಲಿ ಒತ್ತಾಯಿಸಿದರು.
ನಾಡಿಗೆ ದ್ರೋಹ ಬಗೆದಿರುವವರ ವಿರುದ್ಧ ಗೂಂಡಾ ಕಾಯ್ದೆಯಡಿ ಕ್ರಮ ಕೈಗೊಳ್ಳಬೇಕು. ಅನಿವಾರ್ಯವಾದರೆ ಪಾಲಿಕೆಯನ್ನು ಅಮಾನತುಗೊಳಿಸಬೇಕು ಎಂದು ಪತ್ರಿಕಾಗೋಷ್ಠಿಯಲ್ಲಿ ಆಗ್ರಹಿಸಿದರು. ಬೆಳಗಾವಿ ಹೆಸರನ್ನು`ಬೆಳಗಾಂ~ ಎಂದು ಬದಲಾಯಿಸುವ ನಿರ್ಣಯ ಖಂಡನಾರ್ಹ. ಮಹಾರಾಷ್ಟ್ರ ಏಕೀಕರಣ ಸಮಿತಿ ಪದೇ ಪದೇ ಕನ್ನಡ ನಾಡು- ನುಡಿ, ಬಗ್ಗೆ ಅಪಸ್ವರ ಎತ್ತುವ ಮೂಲಕ ಶಾಂತಿ ಕದಡುವ ಕೆಲಸ ಮಾಡುತ್ತಿರುವುದು ಸರಿಯಲ್ಲ ಎಂದರು.
ರಾಜಕೀಯ ಪಕ್ಷಗಳ ಅಧ್ಯಕ್ಷರು, ಪ್ರತಿನಿಧಿಗಳು ಸಹ ಇದಕ್ಕೆ ಪ್ರತಿಕ್ರಿಯೆ ನೀಡಬೇಕು ಎಂದು ಮನವಿ ಮಾಡಿದರು.