ನವದೆಹಲಿ, (ಐಎಎನ್ಎಸ್): 2ಜಿ ಸ್ಪೆಕ್ಟ್ರಂ ಹಗರಣದ ಆರೋಪಕ್ಕೆ ಒಳಗಾಗಿ ತಿಹಾರ್ ಜೈಲಿನಲ್ಲಿರುವ ಡಿಎಂಕೆ ಸಂಸದೆ ಕನಿಮೊಳಿ ಹಾಗೂ ಇತರೆ ಐವರು ಆರೋಪಿಗಳಿಗೆ ಸಂಬಂಧಿಸಿದ ಜಾಮೀನು ಅರ್ಜಿ ವಿಚಾರಣೆಯನ್ನು ಶುಕ್ರವಾರ ಬೆಳಿಗ್ಗೆ ಕೈಗೆತ್ತಿಕೊಳ್ಳಲಾಗುವುದು ಎಂದು ದೆಹಲಿ ಹೈಕೋರ್ಟ್ ಗುರುವಾರ ಪ್ರಕಟಿಸಿದೆ.
ಪ್ರಕರಣಕ್ಕೆ ಸಂಬಂಧಿಸಿದ ಜಾಮೀನು ಅರ್ಜಿ ವಿಚಾರಣೆಯನ್ನು ಶುಕ್ರವಾರ ಬೆಳಿಗ್ಗೆ ನಡೆಸಲಾಗುವುದು ಎಂದು ನ್ಯಾಯಧೀಶ ವಿ.ಕೆ. ಶಾಲಿ ಪ್ರಕಟಿಸಿದರು.
ಯುನಿಟೆಕ್ನ ಸಂಜಯ್ ಚಂದ್ರ, ಸ್ವಾನ್ ಟೆಲಿಕಾಂನ ನಿರ್ದೇಶಕ ವಿನೋದ್ ಗೋಯಂಕಾ, ರಿಲಯನ್ಸ್ ಅನಿಲ್ ಧೀರೂಭಾಯಿ ಅಂಬಾನಿ ಸಮೂಹದ ಕಾರ್ಯನಿರ್ವಾಹಕರಾದ ಹರಿ ನಾಯರ್, ಗೌತಮ್ ದೋಶಿ ಮತ್ತು ಸುರೇಂದ್ರ ಪಿಪಾರಾ ಅವರಿಗೆ ಬುಧವಾರ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಜಿ.ಎಸ್.ಸಿಂಘ್ವಿ ಮತ್ತು ಎಚ್.ಎಲ್.ದತ್ತು ಅವರನ್ನು ಒಳಗೊಂಡ ನ್ಯಾಯಪೀಠವು ಜಾಮೀನು ನೀಡಿತ್ತು.
ಎ.ರಾಜಾ, ಡಿಎಂಕೆ ಸಂಸದೆ ಕನಿಮೊಳಿ ಸೇರಿದಂತೆ ಹಗರಣದಲ್ಲಿ ಭಾಗಿಯಾದ ಇನ್ನೂ 9 ಆರೋಪಿಗಳಿಗೆ ಜಾಮೀನು ದೊರೆತಿಲ್ಲ.
ಕನಿಮೊಳಿ ಮತ್ತು ಇತರ ಐವರು ದೆಹಲಿ ಹೈಕೋರ್ಟ್ನಲ್ಲಿ ಜಾಮೀನು ಅರ್ಜಿ ಸಲ್ಲಿಸಿ, ಡಿಸೆಂಬರ್ 1ಕ್ಕೆ ನಿಗದಿಯಾಗಿರುವ ತಮ್ಮ ಜಾಮೀನು ಅರ್ಜಿಯ ವಿಚಾರಣೆಯನ್ನು ತ್ವರಿತವಾಗಿ ನಡೆಸುವಂತೆ ಬುಧವಾರ ನ್ಯಾಯಾಲಯದಲ್ಲಿ ಮನವಿ ಮಾಡಿಕೊಂಡಿದ್ದರು.