ಮಂಗಳೂರು: ಮಹಿಳಾ ಮತ್ತು ಅಸಂಘಟಿತ ಕಾರ್ಮಿಕರಿಗೆ ಕನಿಷ್ಠ ವೇತನ ನೀಡಲು ಸರ್ಕಾರ ಬದ್ಧವಾಗಿದೆ ಎಂದು ಕೃಷಿ ಉತ್ಪನ್ನ ಮಾರುಕಟ್ಟೆ ಸಚಿವ ಎಸ್. ಕೆ. ಬೆಳ್ಳುಬ್ಬಿ ಹೇಳಿದರು.
ಬೈಕಂಪಾಡಿ ಕೃಷಿ ಉತ್ಪನ್ನ ಮಾರುಕಟ್ಟೆ ಪ್ರಾಂಗಣದಲ್ಲಿ ಕಾರ್ಯನಿರ್ವಹಿಸುತ್ತಿರುವ ಕಾರ್ಮಿಕರ ನೂತನ ಸಂಘಟನೆಯಾದ `ತಲೆ ಹೊರೆ ಕಾರ್ಮಿಕ ಸಂಘ~ (ಎಸ್ಟಿಯು) ವನ್ನು ಇತ್ತೀಚೆಗೆ ಉದ್ಘಾಟಿಸಿ ಅವರು ಮಾತನಾಡಿದರು.
ಕಾರ್ಮಿಕರಿಗೆ ನ್ಯಾಯಯುತವಾಗಿ ಸಿಗಬೇಕಾದ ಸವಲತ್ತುಗಳನ್ನು ದೊರಕಿಸಿಕೊಡುವಲ್ಲಿ ಹಾಗೂ ನೂತನ ಯೋಜನೆಗಳನ್ನು ಜಾರಿಗೊಳಿಸಲು ಸರ್ಕಾರ ಪ್ರಾಮಾಣಿಕ ಪ್ರಯತ್ನ ನಡೆಸಲಿದೆ ಎಂದರು.
ತಲೆ ಹೊರೆ ಕಾರ್ಮಿಕ ಸಂಘದ ಅಧ್ಯಕ್ಷ ಐವನ್ ಡಿಸೋಜ ಮಾತನಾಡಿ, ಬೈಕಂಪಾಡಿ ಪ್ರಾಂಗಣದಲ್ಲಿ ಕಾರ್ಯ ನಿರ್ವಹಿಸುತ್ತಿರುವ 400ಕ್ಕೂ ಹೆಚ್ಚಿನ ಮಹಿಳಾ ಕಾರ್ಮಿಕರಿಗೆ, ಮಾಲೀಕರು ದಿನವೊಂದಕ್ಕೆ 180ರೂ. ವೇತನ ನೀಡುವ ಬದಲು 130ರೂ. ನೀಡಿ ವಂಚಿಸುತ್ತಿರುವ ಕುರಿತು ಹಿರಿಯ ಜಿಲ್ಲಾ ಕಾರ್ಮಿಕ ಅಧಿಕಾರಿಗಳ ಗಮನ ಸೆಳೆದರು.
ಕಾರ್ಮಿಕ ಇಲಾಖೆಯ ನಿರೀಕ್ಷಕ ಶ್ರೀಕುಮಾರ್ ಹಾಗೂ ರಾಜೇಶ್, ಕಾರ್ಮಿಕರಿಗೆ ಸಿಗುವ ಸವಲತ್ತುಗಳ ಬಗ್ಗೆ ಮಾಹಿತಿ ನೀಡಿದರು.
ಮೇಯರ್ ಗುಲ್ಜಾರ್ ಬಾನು, ಮಂಗಳೂರು ಎಪಿಎಂಸಿ ಅಧ್ಯಕ್ಷ ಕೃಷ್ಣರಾಜ ಹೆಗ್ಡೆ, ಕಾಂಗ್ರೆಸ್ ಮುಂದಾಳು ಬಿ. ಎ. ಮೊಯ್ದೀನ್ ಬಾವ, ಜಿಲ್ಲಾ ಕಾರ್ಮಿಕ ವಿಭಾಗದ ಅಧ್ಯಕ್ಷ ಶಿವಕುಮಾರ್ ಕೌಡಿಚಾರ್, ಮುಹಮ್ಮದ್ ಹನೀಫ್, ಫಯಾಜ್ ಮತ್ತಿತರರು ಉಪಸ್ಥಿತರಿದ್ದರು.