ನವದೆಹಲಿ (ಪಿಟಿಐ): ಭ್ರಷ್ಟಾಚಾರ ನಿಗ್ರಹ ಕಾಯ್ದೆ ಸೇರಿದಂತೆ ಅಪರಾಧ ಕೃತ್ಯಗಳಿಗೆ ವಿಧಿಸಲಾದ ಕನಿಷ್ಠ ಶಿಕ್ಷೆಯನ್ನು ನ್ಯಾಯಾಲಯಗಳೂ ಕಡಿಮೆ ಮಾಡಲು ಸಾಧ್ಯವಿಲ್ಲ ಎಂದು ಸುಪ್ರೀಂಕೋರ್ಟ್ ಶುಕ್ರವಾರ ಹೇಳಿದೆ.
ಯಾವುದೇ ಪ್ರಕರಣದಲ್ಲಿ ಆರೋಪಿ ಪಾತ್ರ ಪ್ರಮುಖವಾಗಿರದಿದ್ದರೂ, ಶಿಕ್ಷೆ ಹಿನ್ನೆಲೆಯಲ್ಲಿ ಆತ ಉದ್ಯೋಗ ಕಳೆದುಕೊಳ್ಳುವ ಸಾಧ್ಯತೆ ಇದ್ದರೂ ಆತನಿಗೆ ವಿಧಿಸಿದ ಕನಿಷ್ಠ ಶಿಕ್ಷೆಯನ್ನು ಕಡಿಮೆಗೊಳಿಸಲಾಗದು ಎಂದು ನ್ಯಾಯಪೀಠ ಹೇಳಿದೆ. ಸಂವಿಧಾನದ 142ನೇ ಕಲಂ ಅಡಿಯಲ್ಲಿ ಸುಪ್ರೀಂಕೋರ್ಟ್ಗೆ ಶಿಕ್ಷೆ ಕಡಿಮೆ ಮಾಡುವ ಅಧಿಕಾರವಿದೆ. ಆದರೆ ಅದಕ್ಕೆ ಅನುಮತಿ ಕೊಡಲು ಸಾಧ್ಯವಿಲ್ಲ ಎಂದಿದೆ. ಭ್ರಷ್ಟಾಚಾರ ಪ್ರಕರಣದಲ್ಲಿ ಸಿಬಿಐನಿಂದ ಬಂಧಿತರಾಗಿರುವ ಭಾಸ್ಕರ್ ರಾವ್ ಎಂಬುವವರು ಸಲ್ಲಿಸಿದ ಮೇಲ್ಮನವಿಯನ್ನು ಕೋರ್ಟ್ ವಜಾ ಮಾಡಿದೆ.