ಬೆಂಗಳೂರು: ಪ್ರಾಥಮಿಕ ಶಿಕ್ಷಣ ಕ್ಷೇತ್ರದಲ್ಲಿ ರಾಜ್ಯ ಎದುರಿಸುತ್ತಿರುವ ಸಮಸ್ಯೆಗಳನ್ನು ಪರಿಹರಿಸಲು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಸಚಿವ ಕಿಮ್ಮನೆ ರತ್ನಾಕರ್ ಅವರಿಗೆ ಬನವಾಸಿ ಬಳಗವು ಇತ್ತೀಚೆಗೆ ಮನವಿ ಸಲ್ಲಿಸಿದೆ.
`ಏಳನೇ ತರಗತಿವರೆಗೆ ಕನ್ನಡ ಭಾಷೆಯಲ್ಲೇ ಕಲಿಕೆ ಕಡ್ಡಾಯ ಮಾಡಲಾಗುವುದು ಎಂದು ಕಾಂಗ್ರೆಸ್ ಚುನಾವಣಾ ಪ್ರಣಾಳಿಕೆಯಲ್ಲಿ ತಿಳಿಸಿತ್ತು. ಇದನ್ನು ಅನುಷ್ಠಾನಕ್ಕೆ ತ್ವರಿತಗತಿಯ ಕ್ರಮ ಕೈಗೊಳ್ಳಬೇಕು. ನಾಡಿನ ಭವಿಷ್ಯವನ್ನು ಬೆಳಗಬಲ್ಲ ಶಿಕ್ಷಣ ವ್ಯವಸ್ಥೆಯನ್ನು ಕಟ್ಟಲು ದೀರ್ಘಾವಧಿ ಯೋಜನೆಗಳನ್ನು ರೂಪಿಸಬೇಕು' ಎಂದು ಮನವಿಯಲ್ಲಿ ಒತ್ತಾಯಿಸಲಾಗಿದೆ.
`ಕರ್ನಾಟಕ ಶಿಕ್ಷಣ ನೀತಿಯನ್ನು ಎತ್ತಿ ಹಿಡಿಯಬೇಕು. ರಾಜ್ಯದ ಪ್ರಾಥಮಿಕ ಶಿಕ್ಷಣ ನೀತಿಯ ವಿರುದ್ಧ ಸುಪ್ರೀಂ ಕೋರ್ಟ್ ಮೊರೆ ಹೋಗಲಾಗಿದೆ. ಈ ಹಿಂದಿನ ಸರ್ಕಾರಗಳು ಸಮರ್ಥ ವಾದ ಮಂಡಿಸುವಲ್ಲಿ ವಿಫಲವಾಗಿವೆ. ಈ ನಿಟ್ಟಿನಲ್ಲಿ ರಾಜ್ಯದ ವಕೀಲರ ತಂಡವನ್ನು ಬಲಗೊಳಿಸಬೇಕು' ಎಂದು ಆಗ್ರಹಿಸಲಾಗಿದೆ.