ಬೆಂಗಳೂರು: ಕನ್ನಡ ಮಾಧ್ಯಮದಲ್ಲಿ ಓದಿ ಕಳೆದ ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿ ತರಗತಿಗಳಲ್ಲಿ ಅತಿ ಹೆಚ್ಚು ಅಂಕ ಪಡೆದ 1256 ವಿದ್ಯಾರ್ಥಿಗಳಿಗೆ ಕನ್ನಡ ಅಭಿವೃದ್ಧಿ ಪ್ರಾಧಿಕಾರ, `ಕನ್ನಡ ಮಾಧ್ಯಮ ಪ್ರಶಸ್ತಿ~ ನೀಡಿ ಗೌರವಿಸಲಿದೆ.
ಕಂದಾಯ ವಿಭಾಗಗಳಲ್ಲಿ ಕಾರ್ಯಕ್ರಮಗಳನ್ನು ಆಯೋಜಿಸಿ, ಆಯಾ ಭಾಗದ ವಿದ್ಯಾರ್ಥಿಗಳನ್ನು ಗೌರವಿಸಲಾಗುವುದು ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ `ಮುಖ್ಯಮಂತ್ರಿ~ ಚಂದ್ರು ಶುಕ್ರವಾರ ಇಲ್ಲಿ ಹೇಳಿದರು.
ಮೊದಲ ಬಹುಮಾನ ರೂ 8,000, ದ್ವಿತೀಯ ಬಹುಮಾನ ರೂ 7,000 ಮತ್ತು ತೃತೀಯ ಬಹುಮಾನವಾಗಿ ರೂ 6,000, ಜತಗೆ ವಿದ್ಯಾರ್ಥಿಗಳಿಗೆ ನೆನಪಿನ ಕಾಣಿಕೆ, ಕೈಗಡಿಯಾರ, ಶಾಲಾ ಬ್ಯಾಗ್, ಕನ್ನಡ- ಕನ್ನಡ ನಿಘಂಟು, ಕನ್ನಡ- ಇಂಗ್ಲಿಷ್ ನಿಘಂಟು ಮತ್ತು ಪೆನ್ ನೀಡಲಾಗುವುದು ಎಂದರು.
ಬೆಂಗಳೂರು ಮತ್ತು ಮೈಸೂರು ಕಂದಾಯ ವಿಭಾಗದ ವಿದ್ಯಾರ್ಥಿಗಳಿಗೆ ಇದೇ 28ರಂದು ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನವನದಲ್ಲಿ, ಬೆಳಗಾವಿ ಮತ್ತು ಗುಲ್ಬರ್ಗ ವಿಭಾಗ ಮಟ್ಟದ ವಿದ್ಯಾರ್ಥಿಗಳಿಗೆ ನವೆಂಬರ್ 10ರಂದು ಕೂಡಲ ಸಂಗಮದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು.