ನವದೆಹಲಿ (ಪಿಟಿಐ): ಇಲ್ಲಿನ ವಿವಿಧ ಸರ್ಕಾರಿ ಶಾಲೆಗಳಲ್ಲಿ ನೀಡಿದ ಕಬ್ಬಿಣಾಂಶ ಮಾತ್ರೆ ಸೇವಿಸಿದ ಒಟ್ಟು 21 ವಿದ್ಯಾರ್ಥಿಗಳು ಆಸ್ಪತ್ರೆ ಸೇರಿದ್ದು, 200 ಕ್ಕೂ ಹೆಚ್ಚು ಮಕ್ಕಳಿಗೆ ತೊಂದರೆಯಾಗಿರುವ ಘಟನೆ ನಡೆದಿದೆ.
ಈ ಮೂಲಕ ಕೇಂದ್ರ ಸರ್ಕಾರ, ದೇಶವನ್ನು ರಕ್ತಹೀನತೆಯಿಂದ ಮುಕ್ತಗೊಳಿಸುವ ದೃಷ್ಟಿಯಿಂದ ಜಾರಿಗೆ ತಂದಿರುವ, ಸರ್ಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ ಮಕ್ಕಳಿಗೆ ವಾರಕ್ಕೊಮ್ಮೆ ಕಬ್ಬಿಣಾಂಶವುಳ್ಳ ಮಾತ್ರೆ ನೀಡುವ ಕಾರ್ಯಕ್ರಮಕ್ಕೆ ಆರಂಭದಲ್ಲೇ ವಿಘ್ನ ಎದುರಾಗಿದೆ.
`ಶಾಲೆಗಳಲ್ಲಿ ವಿತರಿಸಿದ ಮಾತ್ರೆ ಸೇವಿಸಿ ಅಸ್ವಸ್ಥರಾದ ಸುಮಾರು 10-12 ವಯಸ್ಸಿನ ಎಂಟು ವಿದ್ಯಾರ್ಥಿಗಳನ್ನು ಸ್ಥಳೀಯ ಪೊಲೀಸರು ಆಸ್ಪತ್ರೆಗೆ ಕರೆ ತಂದರು. ಹೊಟ್ಟೆ ನೋವು ಮತ್ತು ವಾಂತಿಯಿಂದ ಬಳಲುತ್ತಿದ್ದ ವಿದ್ಯಾರ್ಥಿಗಳಿಗೆ ಕೂಡಲೇ ಸೂಕ್ತ ಚಿಕಿತ್ಸೆ ನೀಡಲಾಯಿತು' ಎಂದು ಆಸ್ಪತ್ರೆಯ ಮೇಲ್ವಿಚಾರಕ ಸುಭಾಷ್ ಅಗರ್ವಾಲ್ ತಿಳಿಸಿದ್ದಾರೆ.
`ವಿದ್ಯಾರ್ಥಿಗಳು ಅಸ್ವಸ್ಥಗೊಂಡಿರುವ ಕುರಿತು ದೂರು ಬಂದಿದ್ದು, ತನಿಖೆ ನಡೆಸಲಾಗುತ್ತಿದೆ' ಎಂದು ವಾಯುವ್ಯ ಡಿಸಿಪಿ ಪಿ. ಕರುಣಾಕರನ್ ಹೇಳಿದ್ದಾರೆ. ಘಟನೆ ಕುರಿತು ಪ್ರತಿಕ್ರಿಯಿಸಲು ರಾಜ್ಯ ಆರೋಗ್ಯ ಸಚಿವ ಎ.ಕೆ. ವಾಲಿಯಾ ನಿರಾಕರಿಸಿದ್ದಾರೆ.