ಬೆಳಗಾವಿ: ಕಬ್ಬಿಗೆ ಬೆಲೆ ನಿಗದಿ ಮಾಡಬೇಕು ಎಂದು ಒತ್ತಾಯಿಸಿ ಜಿಲ್ಲಾಧಿಕಾರಿ ಕಚೇರಿ ಎದುರು ಕಬ್ಬು ಬೆಳೆಗಾರರು ಶುಕ್ರವಾರ ಧರಣಿ ಸತ್ಯಾಗ್ರಹ ನಡೆಸಿದರು. ಕಬ್ಬಿಗೆ 3000 ರೂಪಾಯಿ ಮುಂಗಡ ಬೆಲೆ ನಿಗದಿ ಮಾಡಬೇಕು ಎಂದು ಒತ್ತಾಯಿಸಿ, ಭಾರತೀಯ ಕೃಷಿಕ ಸಮಾಜ, ಕಬ್ಬು ಬೆಳೆಗಾರರ ಸಂಘ, ರೈತ ಸಂಘಟನೆಗಳ ಸಹಯೋಗದಲ್ಲಿ ರೈತರು ಪ್ರತಿಭಟನೆ ನಡೆಸಿದರು.
ಕಬ್ಬು ಬೆಲೆ ಅಧ್ಯಯನ ಸಮಿತಿ ಕಬ್ಬು ಬೆಲೆ ನಿಗದಿ ಮಾಡುವಲ್ಲಿ ವಿಫಲವಾಗಿದೆ. ರೈತರಿಗೆ ನ್ಯಾಯ ಒದಗಿಸುವಲ್ಲಿ ವಿಫಲವಾಗಿರುವ ಸಮಿತಿ, ಇದುವರೆಗೂ ಬೆಲೆ ನಿಗದಿ ಮಾಡಿಲ್ಲ. ರೈತ ಸಂಘಟನೆಗಳ ಪದಾಧಿಕಾರಿಗಳು ಸಮಿತಿ ಸದಸ್ಯರಾಗಿದ್ದರೂ ತಮ್ಮ ನೆರವಿಗೆ ಬಂದಿಲ್ಲ ಎಂದು ರೈತರು ಆರೋಪಿಸಿದರು.
ಕೂಡಲೇ ಕಬ್ಬಿಗೆ ಬೆಲೆ ನಿಗದಿ ಮಾಡಬೇಕು. ವಿಳಂಬ ಮಾಡಿದರೆ ಕಾರ್ಖಾನೆಗೆ ಕಬ್ಬು ಕಳುಹಿಸುವುದಿಲ್ಲ ಎಂದು ಸ್ಪಷ್ಟಪಡಿಸಿದರು.
ಭಾರತೀಯ ಕೃಷಿಕ ಸಮಾಜದ ರಾಜ್ಯ ಘಟಕದ ಅಧ್ಯಕ್ಷ ಲಿಂಗರಾಜ ಪಾಟೀಲ, ಸಿದಗೌಡ ಮೋದಗಿ, ಪ್ರೊ. ಟಿ.ಟಿ. ಮುರಕಟ್ನಾಳ ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.