ಬೆಂಗಳೂರು: ಕರ್ನಾಟಕ ಸಾಹಿತ್ಯ ಅಕಾಡೆಮಿ ನೀಡುವ 2009ನೇ ಸಾಲಿನ ಪುಸ್ತಕ ಬಹುಮಾನ ಮತ್ತು 2010ನೇ ಸಾಲಿನ ಗೌರವ ಪ್ರಶಸ್ತಿಗಳು ಪ್ರಕಟವಾಗಿವೆ.
ನಿವೃತ್ತ ಪ್ರಾಧ್ಯಾಪಕ ಡಾ.ಎಸ್.ಎಂ. ವೃಷಭೇಂದ್ರಸ್ವಾಮಿ, ವಿಮರ್ಶಕ ಡಾ.ಎಚ್.ಎಸ್. ರಾಘವೇಂದ್ರ ರಾವ್, ಲೇಖಕರಾದ ಡಾ.ಶ್ರೀಕಂಠ ಕೂಡಿಗೆ, ಕವಯತ್ರಿ ಪ್ರೊ.ಸ. ಉಷಾ ಮತ್ತು ಲೇಖಕರಾದ ಕೋಟಿಗಾನಹಳ್ಳಿ ರಾಮಯ್ಯ ಅವರ ಜೀವಮಾನದ ಸಾಧನೆಯನ್ನು ಗುರುತಿಸಿ 2010ನೇ ಸಾಲಿನ ಗೌರವ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.
ಇಲ್ಲಿನ ‘ಕನ್ನಡ ಭವನ’ದಲ್ಲಿ ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಅಕಾಡೆಮಿಯ ಅಧ್ಯಕ್ಷ ಪ್ರೊ.ಎಂ.ಎಚ್. ಕೃಷ್ಣಯ್ಯ ಅವರು, ‘ಪ್ರಶಸ್ತಿ ಪ್ರದಾನ ಸಮಾರಂಭವನ್ನು ಶಿವಮೊಗ್ಗದಲ್ಲಿ ಮೇ ತಿಂಗಳ ಕೊನೆಯ ವಾರದಲ್ಲಿ ನಡೆಸಲು ಉದ್ದೇಶಿಸಿದ್ದೇವೆ’ ಎಂದರು.
ಗೌರವ ಪ್ರಶಸ್ತಿಯು 10 ಸಾವಿರ ರೂಪಾಯಿ ನಗದು ಮತ್ತು ಸ್ಮರಣಿಕೆಯನ್ನು ಒಳಗೊಂಡಿರುತ್ತದೆ ಎಂದು ಅವರು ತಿಳಿಸಿದರು.
ಡಾ.ಕೆ. ಪುಟ್ಟಸ್ವಾಮಿ ಅವರ ‘ಸಿನಿಮಾಯಾನ’ ಕೃತಿ ಸೇರಿದಂತೆ ಒಟ್ಟು 18 ಮಂದಿ ಲೇಖಕ/ಸಾಹಿತಿಗಳ ಪುಸ್ತಕಗಳಿಗೆ 2009ನೇ ಸಾಲಿನ ಪುಸ್ತಕ ಬಹುಮಾನ ಪ್ರಶಸ್ತಿ ದೊರೆತಿದೆ (ಬಾಕ್ಸ್ ನೋಡಿ). ಈ ಪ್ರಶಸ್ತಿ ಐದು ಸಾವಿರ ರೂಪಾಯಿ ನಗದು ಮತ್ತು ಸ್ಮರಣಿಕೆಯನ್ನು ಒಳಗೊಂಡಿದೆ ಎಂದು ಕೃಷ್ಣಯ್ಯ ತಿಳಿಸಿದರು. ಅಕಾಡೆಮಿಯ ರಿಜಿಸ್ಟ್ರಾರ್ ಮಲ್ಲಿಕಾರ್ಜುನ ಸ್ವಾಮಿ ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.