ನವದೆಹಲಿ: ಸರಳ ನಡೆ, ನುಡಿ ಮತ್ತು ವ್ಯಕ್ತಿತ್ವದಿಂದ ಜನಾನುರಾಗಿಯಾಗಿರುವ ಮಾಜಿ ರಾಷ್ಟ್ರಪತಿ ಎ.ಪಿ.ಜೆ. ಅಬ್ದುಲ್ ಕಲಾಂ ಹಾಗೂ ಭ್ರಷ್ಟರಿಗೆ ಸಿಂಹಸ್ವಪ್ನರಾದ ಕರ್ನಾಟಕದ ಮಾಜಿ ಲೋಕಾಯುಕ್ತ, ನ್ಯಾಯಮೂರ್ತಿ ಎನ್.ಸಂತೋಷ್ ಹೆಗ್ಡೆ ಅವರನ್ನು ಒಂದು ಕೋಟಿ ರೂಪಾಯಿ ಮೊತ್ತದ ಪ್ರತಿಷ್ಠಿತ ಎಸ್.ಆರ್.ಜಿಂದಾಲ್ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.
ಕಲಾಂ ಮತ್ತು ಹೆಗ್ಡೆ ಕ್ರಮವಾಗಿ, ದೇಶದ ವಿಜ್ಞಾನ ಮತ್ತು ತಂತ್ರಜ್ಞಾನ ಕ್ಷೇತ್ರ ಹಾಗೂ ಸಾಮಾಜಿಕ ಅಭಿವೃದ್ಧಿಗೆ ಸಲ್ಲಿಸಿದ ಮಹತ್ವದ ಸೇವೆಯನ್ನು ಪರಿಗಣಿಸಿ ಸೀತಾರಾಂ ಜಿಂದಾಲ್ ಪ್ರತಿಷ್ಠಾನ ಅವರನ್ನು ಈ ಪ್ರಶಸ್ತಿಗೆ ಪರಿಗಣಿಸಿದೆ.
ಇದೇ 23ರಂದು ನಡೆಯುವ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು. ಇದೇ ಸಂದರ್ಭದಲ್ಲಿ ಶಿಕ್ಷಣ, ಆರೋಗ್ಯ, ಗ್ರಾಮೀಣ ಅಭಿವೃದ್ಧಿ ಕ್ಷೇತ್ರದಲ್ಲಿ ಗಣನೀಯ ಸೇವೆ ಸಲ್ಲಿಸಿದ 25 ಜನರನ್ನು ಗೌರವಿಸಲಾಗುವುದು.
ಭ್ರಷ್ಟಾಚಾರ ವಿರೋಧಿ ಹೋರಾಟ, ಸೇನಾ ಪದಕ ಪಡೆದವರೂ ಇದರಲ್ಲಿ ಸೇರಿದ್ದಾರೆ ಎಂದು ಪ್ರತಿಷ್ಠಾನದ ಸಂಸ್ಥಾಪಕ ಅಧ್ಯಕ್ಷ ಸೀತಾರಾಂ ಜಿಂದಾಲ್ ತಿಳಿಸಿದ್ದಾರೆ.