ನವದೆಹಲಿ (ಪಿಟಿಐ): ಕಾಮನ್ ವೆಲ್ತ್ ಕ್ರೀಡಾಕೂಟದಲ್ಲಿ ಭಾರೀ ಭ್ರಷ್ಟಾಚಾರ ನಡೆಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಸುರೇಶ್ ಕಲ್ಮಾಡಿ ಮತ್ತು ಇತರ 9 ಜನರ ವಿರುದ್ಧ ಆರೋಪ ಪಟ್ಟಿ ಸಿದ್ಧಪಡಿಸುವಂತೆ ಸಿಬಿಐಗೆ ದೆಹಲಿ ನ್ಯಾಯಾಲಯ ನಿರ್ದೇಶನ ನೀಡಿದೆ.
ಸುರೇಶ್ ಕಲ್ಮಾಡಿ, ಲಲಿತ್ ಬಾನೋಟ್, ಸ್ವಿಸ್ ಗುತ್ತಿಗೆ ಕಂಪೆನಿ ಸೇರಿದಂತೆ ಇತರ 9 ಆರೋಪಿಗಳ ವಿರುದ್ಧ ಆರೋಪ ಪಟ್ಟಿ ಸಿದ್ಧಪಡಿಸಿ ನ್ಯಾಯಾಲಯಕ್ಕೆ ಸಲ್ಲಿಸುವಂತೆ ದೆಹಲಿ ವಿಶೇಷ ನ್ಯಾಯಾಲಯ ಸಿಬಿಐಗೆ ಶುಕ್ರವಾರ ಸೂಚನೆ ನೀಡಿದೆ.
ಆರೋಪಿಗಳು ಮೋಸ, ಒಳಸಂಚು ನಡೆಸಿ ಸರ್ಕಾರಿ ಬೊಕ್ಕಸಕ್ಕೆ ಭಾರೀ ಪ್ರಮಾಣದ ನಷ್ಟ ಉಂಟುಮಾಡಿರುವುದು ಮೇಲ್ನೋಟಕ್ಕೆ ತಿಳಿದುಬಂದಿದೆ ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿತ್ತು.