ಬೆಂಗಳೂರು: ರಾಜ್ಯಕ್ಕೆ ಎಷ್ಟು ಪ್ರಮಾಣದ ಕಲ್ಲಿದ್ದಲು ಬೇಕು ಎಂಬುದನ್ನು ಸರ್ಕಾರ ಕೇಂದ್ರಕ್ಕೆ ಮೊದಲೇ ತಿಳಿಸಬೇಕಿತ್ತು. ರಾಜ್ಯದಲ್ಲಿ ಈಗ ಎದುರಾಗಿರುವ ವಿದ್ಯುತ್ ಸಮಸ್ಯೆಗೆ ಕೇಂದ್ರ ಸರ್ಕಾರವನ್ನು ದೂರುವುದು ಸರಿಯಲ್ಲ ಎಂದು ಕೇಂದ್ರ ಕಾರ್ಮಿಕ ಸಚಿವ ಮಲ್ಲಿಕಾರ್ಜುನ ಖರ್ಗೆ ಹೇಳಿದರು.
ಕೆಪಿಸಿಸಿ ಕಚೇರಿಯಲ್ಲಿ ಭಾನುವಾರ ಆಯೋಜಿಸಲಾಗಿದ್ದ ಗಾಂಧಿ ಜಯಂತಿ ಕಾರ್ಯಕ್ರಮದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, `ರಾಜ್ಯದಲ್ಲಿ ವಿದ್ಯುತ್ ಕೊರತೆ ಎದುರಾಗಲು ಆಡಳಿತಾರೂಢ ಬಿಜೆಪಿ ಸರ್ಕಾರವೇ ಕಾರಣ~ ಎಂದು ದೂರಿದರು.
ಬಿಜೆಪಿ ಸರ್ಕಾರ ಪ್ರತಿಯೊಂದಕ್ಕೂ ಕೇಂದ್ರ ಸರ್ಕಾರವನ್ನು ದೂಷಿಸುವ ಪದ್ಧತಿ ಬಿಟ್ಟು ತನ್ನ ಜವಾಬ್ದಾರಿ ಅರಿತುಕೊಂಡು ಕಾರ್ಯ ನಿರ್ವಹಿಸಬೇಕು. ವಿದ್ಯುತ್ ಸಮಸ್ಯೆಗೆ ಕೇಂದ್ರ ಸರ್ಕಾರದ ವಿರುದ್ಧ ಹೇಳಿಕೆ ನೀಡುವುದನ್ನು ಬಿಟ್ಟು ಸಂಬಂಧಪಟ್ಟ ಸಚಿವರೊಂದಿಗೆ ಮಾತುಕತೆಗೆ ಮುಂದಾಗಬೇಕು ಎಂದರು.
ರಾಜ್ಯದಲ್ಲಿ 30 ಸಾವಿರ ಕೋಟಿ ರೂಪಾಯಿ ಹೂಡಿಕೆ ಮಾಡುತ್ತೇವೆ ಎಂದು ಜಾಗತಿಕ ಹೂಡಿಕೆದಾರರ ಸಮ್ಮೇಳನದಲ್ಲಿ ಘೋಷಣೆ ಮಾಡಿದ್ದವರು, ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದಿಂದ ಭೂಮಿ ಕೊಡಿಸುತ್ತೇವೆ ಎಂದು ಭರವಸೆ ನೀಡಿದ್ದವರು ಈಗ ಜೈಲಿನಲ್ಲಿದ್ದಾರೆ. ಇವರ ಸ್ಥಿತಿಯನ್ನೆಲ್ಲ ನೋಡಿಕೊಂಡು ಕೇಂದ್ರ ಸರ್ಕಾರದ ವಿರುದ್ಧ ಮಾತನಾಡಲಿ ಎಂದು ಲೇವಡಿ ಮಾಡಿದರು.
ಇದಕ್ಕೂ ಮುನ್ನ ನಡೆದ ಗಾಂಧಿ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದ ಎಐಸಿಸಿ ಪ್ರಧಾನ ಕಾರ್ಯದರ್ಶಿ ಬಿ.ಕೆ. ಹರಿಪ್ರಸಾದ್, `ಬಿಜೆಪಿ ಮತ್ತು ಸಂಘ ಪರಿವಾರದ ಮುಖಂಡರು ಅಣ್ಣಾ ಹಜಾರೆ ಅವರನ್ನು ಆಧುನಿಕ ಗಾಂಧಿ ಎಂದು ಬಿಂಬಿಸಲು ಪ್ರಯತ್ನಿಸುತ್ತಿದ್ದಾರೆ. ಆದರೆ ಗಾಂಧಿಗೆ ಯಾರೂ ಸಾಟಿಯಲ್ಲ~ ಎಂದರು.