ಯಾದಗಿರಿ: ಜಾಗತೀಕರಣದ ಪರಿಣಾಮವಾಗಿ ಸ್ಪರ್ಧಾತ್ಮಕ ಮನೋಭಾವನೆ ಬೆಳೆಯುತ್ತಿದೆ. ಇದರ ಬೆನ್ನಲ್ಲೆ ಜನರ ಮಾನಸಿಕ ನೆಮ್ಮದಿ ಕಳೆದುಕೊಳ್ಳುವಂತಾಗಿದೆ ಎಂದು ಹಿರಿಯ ಶ್ರೇಣಿ ಸಿವಿಲ್ ನ್ಯಾಯಾಧೀಶ ಜಿ.ಎಸ್. ದೇಶಪಾಂಡೆ ಕಳವಳ ವ್ಯಕ್ತಪಡಿಸಿದರು.
ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ವಕೀಲರ ಸಂಘ, ಲಯನ್ಸ್ ಕ್ಲಬ್ಗಳ ಆಶ್ರಯದಲ್ಲಿ ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆ ಅಂಗವಾಗಿ ಶನಿವಾರ ನಗರದ ಬಸವೇಶ್ವರ ಕಲ್ಯಾಣ ಮಂಟಪದಲ್ಲಿ ಆಯೋಜಿಸಿದ್ದ ಕಾನೂನು ಅರಿವು ನೆರವು ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಒತ್ತಡದ ಬದುಕಿನಲ್ಲಿಯೇ ಜನರು ಜೀವನ ಸಾಗಿಸುತ್ತಿದ್ದಾರೆ. ಇದರಿಂದ ಮಾನಸಿಕ ನೆಮ್ಮದಿ ಹಾಳಾಗಿದೆ. ಮಾನಸಿಕ ಆರೋಗ್ಯದ ಕಡೆ ಹೆಚ್ಚಿನ ಕಾಳಜಿ ವಹಿಸುವ ಅಗತ್ಯವಿದೆ. ಇಲ್ಲದಿದ್ದರೆ ಆರೋಗ್ಯದ ಮೇಲೆ ವ್ಯತಿರಿಕ್ತ ಪರಿಣಾಮ ಬೀರುತ್ತದೆ. ಪ್ರತಿಯೊಬ್ಬರು ಮಾನಸಿಕ ಆರೋಗ್ಯದ ಕಡೆ ಕಾಳಜಿ ವಹಿಸುವುದು ತುರ್ತು ಅಗತ್ಯವಾಗಿದೆ ಎಂದು ಹೇಳಿದರು.
ಆರೋಗ್ಯವಂತರಾಗಿರಲು ಪ್ರತಿಯೊಬ್ಬರೂ ಮಾನಸಿಕ ನೆಮ್ಮದಿಯಿಂದ ಇರುವುದು ಅವಶ್ಯಕ. ಜನರಿಗೆ ಕೆಲಸದ ಒತ್ತಡದಿಂದಾಗಿ ಮನಸ್ಸಿಗೆ ನೆಮ್ಮದಿಗೆ ಇಲ್ಲದಂತಾಗಿದೆ. ಇದು ನಾನಾ ರೋಗಗಳಿಗೆ ಆಹ್ವಾನ ನೀಡಿದಂತಾಗುತ್ತದೆ ಎಂದರು.