ಬೆಂಗಳೂರು: ಕಟ್ಟಡ ನಿರ್ಮಾಣದ ತ್ಯಾಜ್ಯವನ್ನು ನಗರದ ವಿವಿಧ ಪ್ರದೇಶಗಳಲ್ಲಿ ಎಲ್ಲೆಂದರಲ್ಲಿ ಸುರಿಯುತ್ತಿದ್ದ 14 ಲಾರಿಗಳನ್ನು ಬಿಬಿಎಂಪಿ ಅಧಿಕಾರಿಗಳು ಶನಿವಾರ ರಾತ್ರಿ ವಶಪಡಿಸಿಕೊಂಡಿದ್ದಾರೆ. ನಗರದಲ್ಲಿ ಬಿಬಿಎಂಪಿ ಶನಿವಾರ ರಾತ್ರಿ ಬೃಹತ್ ಸ್ವಚ್ಛತಾ ಆಂದೋಲನ ಹಮ್ಮಿಕೊಂಡಿತ್ತು. ಈ ಸಂದರ್ಭದಲ್ಲಿ 110 ರಸ್ತೆಗಳಲ್ಲಿ ಸ್ವಚ್ಛತಾ ಕಾರ್ಯ ನಡೆಯಿತು. ಈ ವೇಳೆ ಬೇಗೂರು ಬಳಿ ಅಕ್ರಮವಾಗಿ ಕಟ್ಟಡ ನಿರ್ಮಾಣದ ತ್ಯಾಜ್ಯವನ್ನು ಸುರಿಯುತ್ತಿದ್ದ 14 ಲಾರಿಗಳನ್ನು ವಶಕ್ಕೆ ಪಡೆಯಲಾಯಿತು.
‘ಕಟ್ಟಡ ನಿರ್ಮಾಣ ತ್ಯಾಜ್ಯವನ್ನು ಎಲ್ಲೆಂದರಲ್ಲಿ ಸುರಿಯುತ್ತಿರುವುದು ನಡೆಯುತ್ತಲೇ ಇದೆ. ಹಳೆ ಮದ್ರಾಸ್ ರಸ್ತೆಯಲ್ಲೂ ಪಾದಚಾರಿ ಮಾರ್ಗದ ಮೇಲೆ ಆಗಾಗ್ಗೆ ತ್ಯಾಜ್ಯ ಸುರಿಯುವುದು ಗಮನಕ್ಕೆ ಬಂದಿದೆ. ಇದರ ತಡೆಗೆ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಲಾಗಿದೆ. ತ್ಯಾಜ್ಯ ಸುರಿಯುವ ಲಾರಿಗಳನ್ನು ವಶಪಡಿಸಿಕೊಳ್ಳಲು ಅಧಿಕಾರಿಗಳಿಗೆ ಸೂಚಿಸಲಾಗಿದೆ’ ಎಂದು ಬಿಬಿಎಂಪಿ ಆಯುಕ್ತ ಸಿದ್ದಯ್ಯ ತಿಳಿಸಿದರು.