ಮಂಡ್ಯ: ರಾಜ್ಯ ಕಾಂಗ್ರೆಸ್ ಕರೆಯಂತೆ ಜಿಲ್ಲೆಯಲ್ಲಿಯೂ ಪಕ್ಷದ ಮುಖಂಡರು `ಕಾಂಗ್ರೆಸ್ ನಡಿಗೆ -ಜನರ ಬಳಿಗೆ~ ಕಾರ್ಯಕ್ರಮಕ್ಕೆ ಬುಧವಾರ (ಜೂನ್ 15) ಚಾಲನೆ ನೀಡಲಿದ್ದಾರೆ.
ಮಂಗಳವಾರ ಪಕ್ಷದ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಕಾರ್ಯಕ್ರಮ ವಿವರ ಕುರಿತ ಕಿರುಹೊತ್ತಿಗೆಯನ್ನು ಜಿಲ್ಲಾ ಘಟಕದ ಅಧ್ಯಕ್ಷ ಎಂ.ಎಸ್. ಆತ್ಮಾನಂದ ಅವರು ಬಿಡುಗಡೆ ಮಾಡಿದರು.
ಜಿಲ್ಲೆಯಲ್ಲಿ ಕಾರ್ಯಕ್ರಮ ಜಾರಿಗೊಳಿಸುವ ಉಸ್ತುವಾರಿಯನ್ನು ಮಾಜಿ ಸಚಿವ ಸಿ.ಎಂ. ಇಬ್ರಾಹಿಂ, ಶಾಸಕ ಎಂ. ಕೃಷ್ಣಪ್ಪ ಅವರಿಗೆ ವಹಿಸಲಾಗಿದೆ.
ಬುಧವಾರ ಎಲ್ಲ 14 ಬ್ಲಾಕ್ ಕಾಂಗ್ರೆಸ್ ಸಮಿತಿಯ ವ್ಯಾಪ್ತಿಯಲ್ಲಿ 14 ಪಂಚಾಯಿತಿಗಳಲ್ಲಿ ಏಕ ಕಾಲದಲ್ಲಿ ಕಾರ್ಯಕ್ರಮ ಉದ್ಘಾಟನೆಗೊಳ್ಳಲಿದೆ. ಒಟ್ಟು 60 ದಿನ ಕಾಲ ಪಂಚಾಯಿತಿ ಮತ್ತು ಬೂತ್ ಮಟ್ಟದಲ್ಲಿ ಪಕ್ಷದ ಸಂಘಟನೆಗೆ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದು ಎಂದರು.
ಪಕ್ಷದ ಸಂಘಟನೆಗೆ ಪೂರ್ವಭಾವಿಯಾಗಿ ಈ ಕಾರ್ಯಕ್ರಮವನ್ನು ರೂಪಿಸಿದ್ದು, 14 ಬ್ಲಾಕ್ ಕಾಂಗ್ರೆಸ್ ಸಮಿತಿಗಳಿಗೆ ಜಿಲ್ಲೆಯ ಕಾಂಗ್ರೆಸ್ ಮುಖಂಡರ ಉಸ್ತುವಾರಿಯಲ್ಲಿ ತಲಾ 4 ಜನರಂತೆ 14 ತಂಡ ರಚಿಸಲಾಗಿದೆ. ಆಯಾ ವ್ಯಾಪ್ತಿಯ ಪಂಚಾಯಿತಿ ಮತ್ತು ಬೂತ್ ಮಟ್ಟದಲ್ಲಿ ಪಕ್ಷ ಬಲಪಡಿಸಲು ಈಸಮಿತಿಗಳು ಕಾರ್ಯ ನಿರ್ವಹಿಸಲಿವೆ ಎಂದು ಹೇಳಿಕೆ ತಿಳಿಸಿದೆ.
ಮಂಗಳವಾರ ಪಕ್ಷದ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಶಾಸಕ ಸುರೇಶ್ಗೌಡ, ಮಾಜಿ ಶಾಸಕಿ ಮಲ್ಲಾಜಮ್ಮ, ಮಧು ಮಾದೇಗೌಡ, ಮುಖಂಡರಾದ ಯಮದೂರು ಸಿದ್ದರಾಜು, ಡಾ.ಮೂರ್ತಿ, ಎಂಂ.ಬಿ. ಶ್ರೀಕಾಂತ್, ಪಿ.ಎಂ. ಸೋಮಶೇಖರ್, ಶುಭದಾಯಿನಿ ಇತರರು ಹಾಜರಿದ್ದರು.