ಸಾಗರ: ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರದಲ್ಲಿರುವ ಕಾರಣ ಅಗತ್ಯ ವಸ್ತುಗಳ ಬೆಲೆ ಈಗಾಗಲೇ ಗಗನಕ್ಕೆ ಏರಿದ್ದು, ಕರ್ನಾಟಕದಲ್ಲಿ ಆ ಪಕ್ಷ ಮತ್ತೆ ಅಧಿಕಾರಕ್ಕೆ ಬಂದರೆ ಅವಶ್ಯ ವಸ್ತುಗಳ ಬೆಲೆ ಮತ್ತಷ್ಟು ದುಬಾರಿಯಾಗುತ್ತದೆ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ರಾಜನಾಥ್ಸಿಂಗ್ ಆರೋಪಿಸಿದರು.
ಇಲ್ಲಿನ ಗಾಂಧಿ ಮೈದಾನದಲ್ಲಿ ಸೋಮವಾರ ನಡೆದ ಭಾರತೀಯ ಜನತಾ ಪಕ್ಷದ ಚುನಾವಣಾ ಪ್ರಚಾರ ಸಭೆಯಲ್ಲಿ ಅವರು ಮಾತನಾಡಿದರು. ದೇಶದಲ್ಲಿ ಯಾವ ರಾಜ್ಯದಲ್ಲಿ ಬಿಜೆಪಿ ಸರ್ಕಾರದ ಆಡಳಿತವಿದೆಯೋ ಅಲ್ಲೆಲ್ಲ ರೈತರಿಗೆ ಅನುಕೂಲವಾಗುವ ಅನೇಕ ಯೋಜನೆಗಳು ಜಾರಿಗೆ ಬಂದಿವೆ. ಕರ್ನಾಟಕದಲ್ಲಿ ಐದು ವರ್ಷಗಳ ಆಡಳಿತದಲ್ಲಿ ಬಿಜೆಪಿ ಸರ್ಕಾರ ರೂಪಿಸಿದ ರೈತಪರ, ಜನಪರ ಯೋಜನೆಗಳು ಇತರ ರಾಜ್ಯಗಳಿಗೆ ಮಾದರಿಯಾಗುವಂತಿದೆ ಎಂದರು.
ಹಿಂದಿನ ಐದು ವರ್ಷಗಳಲ್ಲಿ ಕರ್ನಾಟಕದಲ್ಲಿ 15 ಸಾವಿರ ಮೆಗಾವಾಟ್ ವಿದ್ಯುತ್ ಉತ್ಪಾದನೆ ಆಗಿದೆ. ಬಿಜೆಪಿ ಮತ್ತೆ ಅಧಿಕಾರಕ್ಕೆ ಬಂದಲ್ಲಿ ವಿದ್ಯುತ್ ವಿಷಯದಲ್ಲಿ ಈ ರಾಜ್ಯ ಸಂಪೂರ್ಣ ಸ್ವಾವಲಂಬನೆ ಸಾಧಿಸಲಿದೆ ಎಂದು ಹೇಳಿದರು.
ಕರ್ನಾಟಕದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದಾಗ ಬಿ.ಎಸ್. ಯಡಿಯೂರಪ್ಪ ಅವರೇ ಐದು ವರ್ಷಗಳ ಕಾಲ ಮುಖ್ಯಮಂತ್ರಿಯಾಗಿ ಆಡಳಿತ ನಡೆಸುತ್ತಾರೆ ಎಂಬ ನಿರೀಕ್ಷೆ ಇತ್ತು.