ಚಿಕ್ಕೋಡಿ: ಚಿಕ್ಕೋಡಿ ಲೋಕಸಭೆ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕೆ ಇಳಿಯಲು ಒಪ್ಪಿಗೆ ನೀಡಿರುವ ಸಚಿವ ಪ್ರಕಾಶ ಹುಕ್ಕೇರಿ ಅವರ ಕಾರ್ಯಕರ್ತರು ಚುನಾವಣೆ ಪ್ರಚಾರಕ್ಕೆ ಸೋಮವಾರ ಚಾಲನೆ ನೀಡಿದ್ದಾರೆ.
ಸೋಮವಾರ ಪ್ರಕಾಶ ಹುಕ್ಕೇರಿ ಪುತ್ರ, ಜಿ.ಪಂ. ಸದಸ್ಯ ಗಣೇಶ ಹುಕ್ಕೇರಿ ನೇತೃತ್ವದಲ್ಲಿ ಕಾರ್ಯಕರ್ತರು ತಾಲ್ಲೂಕಿನ ಸುಕ್ಷೇತ್ರ ಯಡೂರದ ವೀರಭದ್ರೇಶ್ವರ ಮತ್ತು ನನದಿಯ ಹಾಲಸಿದ್ಧನಾಥ ದೇವರುಗಳಿಗೆ ಪೂಜೆ ಸಲ್ಲಿಸುವ ಮೂಲಕ ಪ್ರಚಾರ ಕಾರ್ಯವನ್ನು ಆರಂಭಿಸಿದರು. ಅವರು ಕ್ಷೇತ್ರ ವ್ಯಾಪ್ತಿಯ ನನದಿ, ನೇಜ್, ನಾಗರಾಳ ಮೊದಲಾದ ಗ್ರಾಮಗಳಲ್ಲಿ ಸಂಚರಿಸಿ ಪಕ್ಷದ ಕಾರ್ಯಕರ್ತರು ಮತ್ತು ಮುಖಂಡರೊಂದಿಗೆ ಚರ್ಚೆ ನಡೆಸಿದರು. ಸಚಿವ ಪ್ರಕಾಶ ಹುಕ್ಕೇರಿ ಅವರೂ ಸೋಮವಾರ ದಿನವಿಡಿ ಸಂಕೇಶ್ವರ ಮತ್ತು ಅಥಣಿ ಕ್ಷೇತ್ರಗಳಲ್ಲಿ ಸಂಚರಿಸಿ ಮುಖಂಡರೊಂದಿಗೆ ಚರ್ಚೆ ನಡೆಸಿದ್ದಾರೆ ಎನ್ನಲಾಗಿದೆ.
ಚಿಕ್ಕೋಡಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸತೀಶ ಕುಲಕರ್ಣಿ, ನಿಪ್ಪಾಣಿ ಗ್ರಾಮೀಣ ಕಾಂಗ್ರೆಸ್ ಅಧ್ಯಕ್ಷ ಪ್ರದೀಪ ಜಾಧವ, ಚಿಕ್ಕೋಡಿ ಪುರಸಭೆ ಅಧ್ಯಕ್ಷ ನರೇಂದ್ರ ನೇರ್ಲೆಕರ, ಎಲ್.ಬಿ. ಖೋತ, ಅಣ್ಣಾ ಗಿಡ್ಡ, ಪೀರಗೌಡ ಪಾಟೀಲ ಮುಂತಾದವರು ಉಪಸ್ಥಿತರಿದ್ದರು.