ನವದೆಹಲಿ: ಬೆಂಗಳೂರು ದಕ್ಷಿಣ ಲೋಕಸಭೆ ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧಿಸಲು ‘ವಿಶಿಷ್ಟ ಗುರುತು ಪ್ರಾಧಿಕಾರ’ (ಯುಐಡಿಎಐ)ದ ಅಧ್ಯಕ್ಷ ನಂದನ್ ನಿಲೇಕಣಿ ಆಸಕ್ತಿ ತೋರಿದ್ದು, ಚೆಂಡು ಈಗ ಕಾಂಗ್ರೆಸ್ ಹೈಕಮಾಂಡ್ ಅಂಗಳದಲ್ಲಿದೆ.
ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಡಾ. ಜಿ. ಪರಮೇಶ್ವರ್ ಅವರನ್ನು ಭೇಟಿ ಮಾಡಿದ್ದ ನಂದನ್ ನಿಲೇಕಣಿ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದಿಂದ ಚುನಾವಣೆಗೆ ನಿಲ್ಲುವ ಇರಾದೆ ವ್ಯಕ್ತಪಡಿಸಿದ್ದಾರೆ. ಈ ವಿಷಯವನ್ನು ಪ್ರದೇಶ ಕಾಂಗ್ರೆಸ್ ಅಧ್ಯಕ್ಷರು ಮಂಗಳವಾರ ಮಾಧ್ಯಮ ಪ್ರತಿನಿಧಿಗಳಿಗೆ ತಿಳಿಸಿದರು.
ಯಾವಾಗ ಪಕ್ಷದ ಸದಸ್ಯತ್ವ ಪಡೆಯಬೇಕು ಹಾಗೂ ಯಾವ ಸಂದರ್ಭದಲ್ಲಿ ಪಕ್ಷಕ್ಕೆ ಸೇರ್ಪಡೆಯಾಗಬೇಕು ಎಂದು ಇನ್ನು ತೀರ್ಮಾನವಾಗಿಲ್ಲ. ಪಕ್ಷದ ನಿಯಮದ ಪ್ರಕಾರ ಸದಸ್ಯತ್ವ ಪಡೆದು 3 ವರ್ಷಗಳ-ವರೆಗೆ ಚುನಾವಣೆ ಸ್ಪರ್ಧಿಸಲು ಅವಕಾಶವಿಲ್ಲ. ಆದರೆ, ವಿಶೇಷ ಸಂದರ್ಭಗಳಲ್ಲಿ ನಿಯಮ ಸಡಿಲಿಸಲು ಕಾಂಗ್ರೆಸ್ ಅಧ್ಯಕ್ಷರಿಗೆ ಅಧಿಕಾರವಿದೆ ಎಂದು ಪರಮೇಶ್ವರ್ ಸ್ಪಷ್ಟಪಡಿಸಿದರು.
ನಂದನ್ ನಿಲೇಕಣಿ ಅವರಂಥ ಗಣ್ಯರು ಕಾಂಗ್ರೆಸ್ ಪಕ್ಷದಲ್ಲಿ ಗುರುತಿಸಿಕೊಳ್ಳುವುದು ಒಳ್ಳೆಯದು ಎಂದರು.
ಸಿದ್ದರಾಮಯ್ಯ ಸಂಪುಟ ವಿಸ್ತರಣೆ ಕುರಿತು ನನಗೆ ಮಾಹಿತಿ ಇಲ್ಲ. ಸೋಮವಾರ ಇಂಥ ಯಾವುದೇ ಚರ್ಚೆಯು ನಡೆಯಲಿಲ್ಲ ಎಂದು ಪರಮೇಶ್ವರ್ ತಿಳಿಸಿದರು.