ಕೊಪ್ಪಳ: ರಾಜ್ಯದಲ್ಲಿನ ಎಲ್ಲ ಅಕ್ರಮ ಗಣಿಗಾರಿಕೆ ಕುರಿತಂತೆ ಸಿಬಿಐ ತನಿಖೆ ನಡೆಸುವಂತೆ ಒತ್ತಾಯಿಸಿ ಪಕ್ಷದ ವತಿಯಿಂದ ಶೀಘ್ರವೇ ಸಾರ್ವಜನಿಕ ಹಿತಾಸಕ್ತಿ ಅರ್ಜಿ (ಪಿಐಎಲ್) ಸಲ್ಲಿಸಲಾಗುವುದು ಎಂದು ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ಹೇಳಿದರು.
ಅವರು ನಗರದಲ್ಲಿ ಶನಿವಾರ ಪಕ್ಷದ ಚುನಾವಣಾ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.
ಕೇಂದ್ರ ಉನ್ನತಾಧಿಕಾರ ಸಮಿತಿಯ (ಸಿಇಸಿ) ವರದಿಯಲ್ಲಿನ ಶಿಫಾರಸಿನಂತೆ ಅಸೋಸಿಯೇಟೆಡ್ ಮೈನಿಂಗ್ ಕಂಪೆನಿಯ (ಎಎಂಸಿ) ಅಕ್ರಮ ಗಣಿಗಾರಿಕೆ ಕುರಿತಂತೆ ಸಿಬಿಐನಿಂದ ತನಿಖೆ ನಡೆಸುವಂತೆ ಸುಪ್ರೀಂ ಕೋರ್ಟ್ ಆದೇಶಿಸಿದೆ.
ಅಲ್ಲದೇ, ರಾಜ್ಯದ ಬಳ್ಳಾರಿ, ಚಿತ್ರದುರ್ಗ ಹಾಗೂ ತುಮಕೂರು ಜಿಲ್ಲೆಗಳಲ್ಲಿ ಸಹ ಸಾಕಷ್ಟು ಪ್ರಮಾಣದಲ್ಲಿ ಅಕ್ರಮ ಗಣಿಗಾರಿಕೆ ನಡೆದಿದೆ ಎಂದು ಸಿಇಸಿ ವರದಿಯಲ್ಲಿ ವಿವರಿಸಲಾಗಿದೆ. ಈ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಕಂಡು ಬಂದಿರುವ ಎಲ್ಲ ಅಕ್ರಮ ಗಣಿಗಾರಿಕೆ ಕುರಿತಂತೆ ಸಿಬಿಐ ತನಿಖೆ ನಡೆಸಬೇಕು ಎಂದು ಒತ್ತಾಯಿಸಿದರು.
ಈ ಸಂಬಂಧ ಶೀಘ್ರವೇ ಕಾನೂನು ತಜ್ಞರೊಂದಿಗೆ ಸಮಾಲೋಚನೆ ನಡೆಸಲಾಗುವುದು. ಪಕ್ಷದ ವತಿಯಿಂದ ಅಥವಾ ವ್ಯಕ್ತಿಗತವಾಗಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಬೇಕೇ ಎಂಬ ಬಗ್ಗೆ ಹೈಕಮಾಂಡ್ನೊಂದಿಗೆ ಚರ್ಚಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.
ಗಣಿಗಾರಿಕೆ ನಡೆಸುವ ಸಂಬಂಧ ಎಎಂಸಿಗೆ ನೀಡಿದ್ದ ಪರವಾನಗಿ ಅವಧಿ 1996ರಲ್ಲಿಯೇ ಮುಗಿದಿತ್ತು. ಆದರೆ, ತಪ್ಪು ಮಾಹಿತಿ ಸಲ್ಲಿಸುವ ಮೂಲಕ 2009ರ ವರೆಗೆ ಅಂದರೆ 13 ವರ್ಷಗಳ ಕಾಲ ಅಕ್ರಮ ಗಣಿಗಾರಿಕೆ ನಡೆಸಿರುವ ಎಎಂಸಿಯನ್ನು ಜಿ.ಜನಾರ್ದನ ರೆಡ್ಡಿ ಒಡೆತನದ ಒಎಂಸಿ ಸಂಸ್ಥೆಯಲ್ಲಿ ವಿಲೀನ ಮಾಡಲು ಆಗ ಮುಖ್ಯಮಂತ್ರಿಯಾಗಿದ್ದ ಬಿ.ಎಸ್.ಯಡಿಯೂರಪ್ಪ ಅನುಮತಿ ನೀಡಿದ್ದಾರೆ.
ಹೀಗಾಗಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವಿರುದ್ಧವೂ ಸಿಬಿಐ ತನಿಖೆ ನಡೆಸಬೇಕು ಎಂದು ಅವರು ಒತ್ತಾಯಿಸಿದರು.