ಕೂಡಲಸಂಗಮ (ಬಾಗಲಕೋಟೆ): ಪಕ್ಷ ಸಂಘಟನೆ ಉದ್ದೇಶದಿಂದ ರಾಜ್ಯದಾದ್ಯಂತ ಅಕ್ಟೋಬರ್ 2ರಿಂದ `ಮತದಾರರೊಂದಿಗೆ ಮುಖಾಮುಖಿ~ ಕಾರ್ಯಕ್ರಮವನ್ನು ನಡೆಸುವುದಾಗಿ ಕೆಪಿಸಿಸಿ ಅಧ್ಯಕ್ಷ ಡಾ. ಜಿ. ಪರಮೇಶ್ವರ್ ತಿಳಿಸಿದರು.
ಕೂಡಲಸಂಗಮದಲ್ಲಿ ಸೋಮವಾರ ನಡೆದ `ಕಾಂಗ್ರೆಸ್ ನಡಿಗೆ -ಜನರ ಬಳಿಗೆ~ ಸಮಾರೋಪ ಸಮಾರಂಭದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ನಡಿಗೆ ಕಾರ್ಯಕ್ರಮವು ತಳಮಟ್ಟದಲ್ಲಿ ಪಕ್ಷ ಸಂಘಟನೆಯ ಉದ್ದೇಶದಲ್ಲಿ ಅತ್ಯಂತ ಯಶಸ್ವಿಯಾಗಿದೆ ಎಂದರು.
ನಡಿಗೆಯ ಅವಧಿಯಲ್ಲಿ ರಾಜ್ಯದ ಎಲ್ಲಾ ಜಿಲ್ಲೆಯ 10789 ಗ್ರಾಮ ಪಂಚಾಯಿತಿಗಳಲ್ಲಿ ಸಭೆ ನಡೆಸಲಾಗಿದೆ, 4666 ಬೂತ್ನಲ್ಲಿ ಸಮಿತಿ ರಚನೆ ಮಾಡಲಾಗಿದೆ, ಈ ಮೂಲಕ 7.5 ಲಕ್ಷ ಜನತೆ ಕಾಂಗ್ರೆಸ್ ಸದಸ್ಯರಾಗಿದ್ದಾರೆ ಎಂದರು. ನಡಿಗೆ ಸಂದರ್ಭದಲ್ಲಿ ನಾಡಿನ ಜನತೆಯ ನಾಡಿ ಮಿಡಿತ ಪಕ್ಷದ ಮುಖಂಡರ ಗಮನಕ್ಕೆ ಬಂದಿದೆ ಎಂದ ಅವರು, ಬದಲಾಗಿರುವ ರಾಜಕೀಯ ಪರಿಸ್ಥಿತಿಗೆ ಅನುಗುಣವಾಗಿ ಕಾಂಗ್ರೆಸ್ ಕೂಡ ಬದಲಾಗಬೇಕಿದೆ, ಕಾರ್ಯಕರ್ತರು ಜನರ ಕಷ್ಟ-ಸುಖಃಕ್ಕೆ ಸ್ಪಂದಿಸಬೇಕಿದೆ ಎಂದು ಸಲಹೆ ಮಾಡಿದರು.
~ನಡಿಗೆ~ಯನ್ನು ಯಶಸ್ವಿಗೊಳಿಸುವಲ್ಲಿ ಮುಂದಾಳತ್ವ ವಹಿಸಿದ್ದ ಹಿರಿಯ ಮುಖಂಡ, ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಸೇರಿದಂತೆ ಪಕ್ಷದ ಕಾರ್ಯಕರ್ತರನ್ನು ಅಭಿನಂದಿಸಿದರು.
ಮಾಜಿ ಮುಖ್ಯಮಂತ್ರಿ ಧರ್ಮಸಿಂಗ್, ಕೇಂದ್ರ ಸಚಿವ ಕೆ.ಎಚ್. ಮುನಿಯಪ್ಪ, ಎಐಸಿಸಿ ಪ್ರಧಾನ ಕಾರ್ಯದರ್ಶಿ ಆಸ್ಕರ್ ಫರ್ನಾಂಡಿಸ್ ಮತ್ತಿತರ ಕಾಂಗ್ರೆಸ್ ನಾಯಕರು ಉಪಸ್ಥಿತರಿದ್ದರು.