ಮಳವಳ್ಳಿ: ಕಾಡಾನೆಗಳು ರೈತರ ಜಮೀನಿಗೆ ನುಗ್ಗಿ ಬೆಳೆ ನಾಶ ಮಾಡುವುದನ್ನು ತಡೆಗಟ್ಟಲು ಅರಣ್ಯ ಪ್ರದೇಶದ ಗಡಿಯಲ್ಲಿ ಕಂದಕ ನಿರ್ಮಿಸಿ, ಸೌರಶಕ್ತಿ ತಂತಿ ಬೇಲಿ ಹಾಕಲು ಕ್ರಮ ತೆಗೆದುಕೊಳ್ಳಲಾಗುವುದು ಎಂದು ಅರಣ್ಯ ಸಚಿವ ಸಿ.ಪಿ.ಯೋಗೇಶ್ವರ್ ತಿಳಿಸಿದರು.
ತಾಲ್ಲೂಕಿನ ತಾಳೆಹಳ್ಳದಲ್ಲಿ ಕಾಡಾನೆಗಳ ದಾಳಿಯಿಂದ ಹಾನಿಗೊಳಗಾಗಿರುವ ಬಾಳೆ ತೋಟವನ್ನು ವೀಕ್ಷಿಸಿದ ನಂತರ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ತಾಲ್ಲೂಕಿನಲ್ಲಿ ನಡೆಯುತ್ತಿರುವ ಆನೆ ಹಾಗೂ ಮಾನವ ಸಂಘರ್ಷ ಕುರಿತು ಅಧಿಕಾರಿಗಳು ವರದಿ ನೀಡಿದ್ದರು. ಈ ಹಿನ್ನೆಲೆಯಲ್ಲಿ ಸ್ಥಳಕ್ಕೆ ಭೇಟಿ ಪರಿಶೀಲನೆ ನಡೆಸುತ್ತಿದ್ದೇನೆ ಎಂದರು.
ತಾಲ್ಲೂಕಿನ ಗಡಿ ಭಾಗದಲ್ಲಿ ಚಾಮರಾಜನಗರ ಜಿಲ್ಲೆ ಇದೆ. ಈ ವ್ಯಾಪ್ತಿಯಲ್ಲಿ ಅರಣ್ಯ ಪ್ರದೇಶವನ್ನು ಅತಿಕ್ರಮ ಮಾಡಲಾಗಿದೆ. ಅಲ್ಲದೆ ಜಲ ವಿದ್ಯುತ್ ಉತ್ಪಾದನಾ ಕೇಂದ್ರ ಕೂಡ ಆನೆಗಳು ಕಾಡನ್ನು ಬಿಟ್ಟು ನಾಡಿಗೆ ಬರುವಂತೆ ಮಾಡಿದೆ. ಈ ಕುರಿತು ಚರ್ಚೆ ನಡೆಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಹೇಳಿದರು.
ಕಾಡಾನೆ ದಾಳಿಯಿಂದ ಬೆಳೆ ನಷ್ಟವಾಗಿರುವ ರೈತರಿಗೆ ಪರಿಹಾರ ನೀಡುವಲ್ಲಿ ವಿಳಂಬವಾಗಬಾರದು. ಹತ್ತು ದಿನಗಳಲ್ಲಿ ರೈತರಿಗೆ ಪರಿಹಾರ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ಈ ಸಂದರ್ಭದಲ್ಲಿ ಶಾಸಕ ಪಿ.ಎಂ.ನರೇಂದ್ರಸ್ವಾಮಿ ಇದ್ದರು. ಇದಕ್ಕೂ ಮುನ್ನ ಪಟ್ಟಣದ ಪ್ರವಾಸಿಮಂದಿರದಲ್ಲಿ ರೈತರು, ಅಧಿಕಾರಿಗಳ ಸಭೆ ನಡೆಸಿದರು. ಜಿಲ್ಲಾಧಿಕಾರಿ ಡಾ.ಪಿ.ಸಿ.ಜಾಫರ್, ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಬಿ.ಕೆ.ಸಿಂಗ್, ಹೆಚ್ಚುವರಿ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಡಾ.ರಾಜಣ್ಣ, ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಅಜಯ್ಮಿಶ್ರ, ಉಪ ಅರಣ್ಯ ಸಂರಕ್ಷಣಾಧಿಕಾರಿ ಮನೋಜ್ಕುಮಾರ್, ಉಪವಿಭಾಗಾಧಿಕಾರಿ ರಂಗಪ್ಪ, ತಹಶೀಲ್ದಾರ್ ಬಿ.ವಾಣಿ, ಬಿಜೆಪಿ ಜಿಲ್ಲಾಧ್ಯಕ್ಷ ಎಚ್. ಪಿ.ಮಹೇಶ್ ಇದ್ದರು.