ಶಿವಮೊಗ್ಗ: ಮನುಷ್ಯನ ಒಳಗಿನ ಮೃಗತ್ವ ಅಳಿದರೆ ಕಾಡು ಉಳಿಯುತ್ತದೆ. ಎಲ್ಲರ ಬದುಕಿಗಾಗಿ ಕಾಡು ಉಳಿಯಲೇಬೇಕು ಎಂದು ರಾಜ್ಯಸಭಾ ಸದಸ್ಯ ಆಯನೂರು ಮಂಜುನಾಥ್ ಪ್ರತಿಪಾದಿಸಿದರು.
ನಗರದಲ್ಲಿ ಅರಣ್ಯ ಇಲಾಖೆ ವನ್ಯಜೀವಿ ವಿಭಾಗ ಸೋಮವಾರ 58ನೇ ವನ್ಯಜೀವಿ ಸಪ್ತಾಹದ ಅಂಗವಾಗಿ ಹಮ್ಮಿಕೊಂಡಿದ್ದ ಬೈಸಿಕಲ್ ಹಾಗೂ ಕಾಲ್ನಡಿಗೆ ಜಾಥಾಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ವನ ಹಾಗೂ ವನ್ಯಜೀವಿ ರಕ್ಷಣೆ ಕೇವಲ ಸರ್ಕಾರದಿಂದ ಮಾತ್ರ ಸಾಧ್ಯವಿಲ್ಲ. ಇದಕ್ಕೆ ಜನರ ಸಹಭಾಗಿತ್ವ ಮುಖ್ಯ. ಈ ನಿಟ್ಟಿನಲ್ಲಿ ಮನುಷ್ಯ ತನ್ನ ಒಳಗಿನ ಮೃಗೀಯ ಗುಣಗಳನ್ನು ತೊಡೆದು ಹಾಕಿ, ಕಾಡು, ಕಾಡು ಪ್ರಾಣಿಗಳನ್ನು ರಕ್ಷಿಸುವ ಗುಣ ಬೆಳೆಸಿಕೊಳ್ಳಬೇಕು ಎಂದರು.
ನಗರಸಭಾ ಅಧ್ಯಕ್ಷ ಎಸ್.ಎನ್. ಚನ್ನಬಸಪ್ಪ ಹಾಗೂ ಜಿಲ್ಲಾಧಿಕಾರಿ ಎಂ.ವಿ. ವೇದಮೂರ್ತಿ ಮಾತನಾಡಿದರು.
ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಡಾ.ಸಂಜಯ್ ಬಿಜ್ಜೂರ್, ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಸ್ಮಿತಾ ಬಿಜ್ಜೂರ್, ಉಪ ಸಂರಕ್ಷಣಾಧಿಕಾರಿ (ವನ್ಯಜೀವಿ ವಿಭಾಗ) ಟಿ.ಜೆ. ರವಿಕುಮಾರ್ ಮುಂತಾದವರು ಸಮಾರಂಭದಲ್ಲಿ ಭಾಗವಹಿಸಿದ್ದರು.