ಚನ್ನಪಟ್ಟಣ: ನಾಗರಿಕರಲ್ಲಿ ಕಾನೂನಿನ ಬಗ್ಗೆ ಸೂಕ್ತ ತಿಳಿವಳಿಕೆ ಇಲ್ಲದಿದ್ದರೆ ಸಮಸ್ಯೆ ಎದುರಿಸಬೇಕಾಗುತ್ತದೆ ಎಂದು ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಎನ್.ರುದ್ರಮುನಿ ಇಲ್ಲಿ ಅಭಿಪ್ರಾಯಪಟ್ಟರು.
ಜಿಲ್ಲಾ ಹಾಗೂ ತಾಲ್ಲೂಕು ಸೇವೆಗಳ ಪ್ರಾಧಿಕಾರ, ವಕೀಲರ ಸಂಘ, ಶಿಕ್ಷಣ ಇಲಾಖೆ ಹಾಗೂ ಲಯನ್ಸ್ ಸಂಸ್ಥೆ ಬಾಲು ಪಬ್ಲಿಕ್ ಶಾಲೆ ಆವರಣದಲ್ಲಿ ಸರ್ಕಾರಿ, ಖಾಸಗಿ ಪ್ರಾಥಮಿಕ ಹಾಗೂ ಪ್ರೌಢಶಾಲಾ ಶಿಕ್ಷಕರಿಗೆ ಭಾನುವಾರ ಏರ್ಪಡಿಸಿದ್ದ ಕಾನೂನು ಕಾರ್ಯಾಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಕಾನೂನಿನ ಜ್ಞಾನ ಇಲ್ಲದಿದ್ದಲ್ಲಿ ಜೀವನದಲ್ಲಿ ಸಣ್ಣವಿಚಾರದಲ್ಲೂ ತೊಂದರೆ ಅನುಭವಿಸಬೇಕಾಗುತ್ತದೆ. ಶಿಕ್ಷಣದ ಜೊತೆಗೆ ಮಕ್ಕಳಿಗೆ ಕಾನೂನಿನ ಬಗ್ಗೆ ಅರಿವು ಮೂಡಿಸುವ ಕೆಲಸವನ್ನು ಶಿಕ್ಷಕರು ಮಾಡಬೇಕು. ನ್ಯಾಯಾಲಯದ ಮೆಟ್ಟಿಲು ಹತ್ತುವುದು ಅಪರಾಧ ಎಂಬ ತಪ್ಪು ಕಲ್ಪನೆಯನ್ನು ಮನಸ್ಸಿನಿಂದ ದೂರಮಾಡಬೇಕು ಎಂದು ಅವರು ತಿಳಿಸಿದರು.ವಕೀಲರ ಸಂಘದ ಅಧ್ಯಕ್ಷ ಜೆ.ಟಿ.ಪ್ರಕಾಶ್ ಮಾತನಾಡಿ, ಶಿಕ್ಷಕರು ಮಕ್ಕಳನ್ನು ವೃಥಾ ದಂಡಿಸದೆ ಪ್ರೀತಿ ವಿಶ್ವಾಸದಿಂದ ಮಕ್ಕಳ ಮನಸ್ಸು ಗೆಲ್ಲಬೇಕು, ಮಕ್ಕಳನ್ನು ಉತ್ತಮ ಪ್ರಜೆಗಳಾಗಿ ರೂಪಿಸಲು ಸಂಕಲ್ಪ ಮಾಡಬೇಕು ಎಂದು ತಿಳಿಸಿದರು.
ರಾಮನಗರ ಪ್ರಧಾನ ಸಿವಿಲ್ ನ್ಯಾಯಾಧೀಶರಾದ ವಿ.ಪುಷ್ಟಾವತಿ, ಕೆ.ಎನ್.ರೂಪ, ಅಪರ ಸಿವಿಲ್ ನ್ಯಾಯಾಧೀಶ ನಾರಾಯಣ ಪ್ರಸಾದ್, ಕನಕಪುರ ಪ್ರಧಾನ ಸಿವಿಲ್ ನ್ಯಾಯಾಧೀಶ ಶಶಿಕಾಂತ್ ಬಿ.ಬಾವಿಕಟ್ಟೆ, ಅನುದಾನರಹಿತ ಶಾಲೆಗಳ ಸಂಘದ ಅಧ್ಯಕ್ಷ ವಿ.ವೆಂಕಟಸುಬ್ಬಯ್ಯ, ಪಿ.ಎಲ್.ನಾರಾಯಣಸ್ವಾಮಿ, ರಾಷ್ಟ್ರೀಯ ಕಾನೂನು ಶಾಲೆಯ ಯೋಜನಾ ಸಂಯೋಜಕ ರಾಜೇಂದ್ರ ಪ್ರಸಾದ್ ಮಾತನಾಡಿದರು.
ಚಿಕ್ಕಮಗಳೂರು ನ್ಯಾಯಾಧೀಶ ಐ.ಸಿ.ನಾಯಕ್, ವಕೀಲರ ಸಂಘದ ಕಾರ್ಯದರ್ಶಿ ಎ.ಲೋಕೇಶ್ ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ಹೃದಯ ಶಸ್ತ್ರ ಚಿಕಿತ್ಸೆಗೆ ಒಳಗಾಗುತ್ತಿರುವ ನಾಗರಾಜ್ ರಾವ್ ಅವರಿಗೆ ಲಯನ್ಸ್ ಸಂಸ್ಥೆ ವತಿಯಿಂದ ಆರ್ಥಿಕ ನೆರವಿನ ಚೆಕ್ ನೀಡಲಾಯಿತು.ಪ್ರಧಾನ ಸಿವಿಲ್ ನ್ಯಾಯಾಧೀಶ ವಿ.ನಾಗರಾಜು ಸ್ವಾಗತಿಸಿದರು. ಲಯನ್ಸ್ ಸಂಸ್ಥೆ ಅಧ್ಯಕ್ಷ ವಿ.ಸಿ.ಚಂದ್ರೇಗೌಡ ಅಧ್ಯಕ್ಷತೆ ವಹಿಸಿದ್ದರು. ವಕೀಲ ಕೃಷ್ಣಪ್ಪ ನಿರೂಪಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.