ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಮೇಖ್ರಿ ವೃತ್ತದ ಸೇತುವೆಯ ಕೆಳಭಾಗದಲ್ಲಿ ರಸ್ತೆ ದುರಸ್ತಿ ಕಾಮಗಾರಿ ನಡೆಸುತ್ತಿರುವುದರಿಂದ ಗುರುವಾರ ಬಳ್ಳಾರಿ ರಸ್ತೆ, ಜಯಮಹಲ್ ರಸ್ತೆ ಹಾಗೂ ಸುತ್ತಮುತ್ತಲಿನ ರಸ್ತೆಗಳಲ್ಲಿ ವಾಹನ ದಟ್ಟಣೆ ಉಂಟಾಯಿತು.
ವಾಹನಗಳು ಗಂಟೆಗಟ್ಟಲೆ ರಸ್ತೆಯಲ್ಲೇ ನಿಲ್ಲಬೇಕಾದ ಪರಿಸ್ಥಿತಿ ನಿರ್ಮಾಣವಾಗಿತ್ತು. ಸಂಜೆಯ ವೇಳೆಗೆ ವಾಹನ ದಟ್ಟಣೆ ಹೆಚ್ಚಾಗಿ ರಾತ್ರಿ ಹನ್ನೆರಡು ಗಂಟೆಯವರೆಗೂ ಪ್ರಯಾಣಿಕರು ಪರದಾಡುವಂತಾಯಿತು. ವಿಮಾನ ನಿಲ್ದಾಣಕ್ಕೆ ಹೋಗುವ ಪ್ರಯಾಣಿಕರಿಗೆ ತೀವ್ರ ತೊಂದರೆಯಾಯಿತು.
‘ಕಾವೇರಿ ಜಂಕ್ಷನ್ನಿಂದ ಹೆಬ್ಬಾಳದ ಕಡೆಗೆ ಹೋಗುವ ಮಾರ್ಗದಲ್ಲಿ ಮೇಖ್ರಿ ವೃತ್ತ ಅಂಡರ್ಪಾಸ್ನಲ್ಲಿ ರಸ್ತೆ ದುರಸ್ತಿ ಕಾಮಗಾರಿ ನಡೆಯುತ್ತಿದೆ. ಅಂಡರ್ಪಾಸ್ನಲ್ಲಿ ಮಳೆ ನೀರು ಪಂಪ್ ಮಾಡುವ ಜಾಗದ ಮೆಸ್ ಮರು ಅಳವಡಿಕೆ ನಡೆಯುತ್ತಿದೆ. ಹಾಳಾಗಿದ್ದ ಅಂಡರ್ಪಾಸ್ ರಸ್ತೆಗೆ ಕಾಂಕ್ರಿಟ್ ಹಾಕಲಾಗುತ್ತಿದೆ. ಹೀಗಾಗಿ ಕಾಮಗಾರಿ ಸ್ವಲ್ಪ ವಿಳಂಬವಾಗಿದೆ. ಶನಿವಾರದ ಹೊತ್ತಿಗೆ ಕಾಮಗಾರಿ ಮುಗಿಯಲಿದೆ’ ಎಂದು ಬಿಬಿಎಂಪಿ ಅಧಿಕಾರಿಗಳು ತಿಳಿಸಿದ್ದಾರೆ.