ಬೆಂಗಳೂರು: ರಾಜ್ಯದ ಎಲ್ಲ ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿ ಕಾರ್ಮಿಕರ ಮಕ್ಕಳಿಗಾಗಿ ಆರಂಭಿಸಲು ಉದ್ದೇಶಿಸಿರುವ 11 ವಸತಿ ಶಾಲೆಗಳ ನಿರ್ವಹಣೆಯನ್ನು ದೆಹಲಿ ಪಬ್ಲಿಕ್ ಶಾಲೆ (ಡಿಪಿಎಸ್) ಆಡಳಿತ ಮಂಡಳಿಗೆ ವಹಿಸಲು ಸರ್ಕಾರ ಮುಂದಾಗಿದೆ ಎಂದು ಕಾರ್ಮಿಕ ಇಲಾಖೆ ಸಚಿವ ಪಿ.ಟಿ. ಪರಮೇಶ್ವರ್ ನಾಯ್ಕ ತಿಳಿಸಿದರು.
‘ಡಿಪಿಎಸ್ನಲ್ಲಿ ಗುಣಮಟ್ಟದ ಶಿಕ್ಷಣ ನೀಡಲಾಗುತ್ತಿದೆ. ಈ ಬಗ್ಗೆ ಹಲವರು ಸಲಹೆ ನೀಡಿದರು. ಡಿಪಿಎಸ್ಗೆ ನಿರ್ವಹಣೆ ಜವಾಬ್ದಾರಿ ನೀಡಬಹುದು ಎಂದು ಮುಖ್ಯಮಂತ್ರಿ ಸಹ ತಿಳಿಸಿದರು. ಆದ್ದರಿಂದ ಈ ಶಾಲೆಗಳ ನಿರ್ವಹಣೆಯನ್ನು ಡಿಪಿಎಸ್ಗೆ ವಹಿಸುವ ಚಿಂತನೆ ಇದೆ ಎಂದು ತಿಳಿಸಿದರು.
ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡರು ಈ ಶಾಲಾ ಆಡಳಿತ ಮಂಡಳಿಯಲ್ಲಿರುವುದರಿಂದ ಹೊರಗುತ್ತಿಗೆ ಮಾದರಿಯಲ್ಲಿ ವಸತಿ ಶಾಲೆಗಳನ್ನು ನಿರ್ವಹಣೆಯನ್ನು ನೀಡಲಾಗುತ್ತಿದೆಯೇ ಎನ್ನುವ ಪ್ರಶ್ನೆಗೆ ಉತ್ತರಿಸಿದ ಸಚಿವರು, ‘ಈ ವಿಷಯ ಗೊತ್ತಿಲ್ಲ. ಶಾಲೆಗಳನ್ನು ಡಿಪಿಎಸ್ಗೆ ವಹಿಸುವ ಬಗ್ಗೆ ತೀರ್ಮಾನ ಕೈಗೊಂಡಿಲ್ಲ. ಕೇವಲ ಚಿಂತನೆ ಮಾಡಿದ್ದೇವೆ’ ಎಂದರು.
ಪ್ರತಿ ವಸತಿ ಶಾಲೆಗಳ ಕಟ್ಟಡ ಮತ್ತು ಮೂಲಸೌಕರ್ಯ ಕಲ್ಪಿಸಲು 3 ಕೋಟಿ ರೂಪಾಯಿ ವೆಚ್ಚ ಮಾಡಲಾಗುವುದು. ಎಲ್ಲ ಸೌಲಭ್ಯಗಳನ್ನು ಕಲ್ಪಿಸಿದ ನಂತರವೇ ನಿರ್ವಹಣೆ ಜವಾಬ್ದಾರಿ ನೀಡಲಾಗುವುದು’ ಎಂದರು. ಈಗಾಗಲೇ ಬಳ್ಳಾರಿ, ಮೈಸೂರು, ಹುಬ್ಬಳ್ಳಿ–ಧಾರವಾಡದಲ್ಲಿ ಶಾಲೆಗಳಿಗೆ ಸ್ಥಳ ಗುರುತಿಸಲಾಗಿದೆ. ಕೆಲವೆಡೆ ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿ (ಕೆಐಎಡಿಬಿ) ಜಾಗ ಪಡೆದುಕೊಳ್ಳಲಾಗುವುದು.
ಈ ಶಾಲೆಗಳಲ್ಲಿ ಕಟ್ಟಡ ಕಾರ್ಮಿಕರ ಮಕ್ಕಳ ಪ್ರವೇಶಕ್ಕೆ ಮೊದಲ ಆದ್ಯತೆ ನೀಡಲಾಗುವುದು. ನಂತರ ಇತರ ಕಾರ್ಮಿಕರ ಮಕ್ಕಳಿಗೆ ಅವಕಾಶ ಕಲ್ಪಿಸಲಾಗುವುದು. 5ನೇ ತರಗತಿಯಿಂದ ಪಿಯುವರೆಗೆ ಶಿಕ್ಷಣ ನೀಡಲಾಗುವುದು. ಮುಂದಿನ ಶೈಕ್ಷಣಿಕ ವರ್ಷದಿಂದಲೇ ಈ ಶಾಲೆಗಳನ್ನು ಆರಂಭಿಸಲಾಗುವುದು ಎಂದು ತಿಳಿಸಿದರು.
ಕಟ್ಟಡ ಕಾರ್ಮಿಕರ ಕಲ್ಯಾಣ ಮಂಡಳಿಯಲ್ಲಿ 2066 ಕೋಟಿ ರೂಪಾಯಿ ಲಭ್ಯವಿದ್ದು, ಕಾರ್ಮಿಕರ ಮಕ್ಕಳಿಗೆ ಶಿಕ್ಷಣ ಸೇರಿದಂತೆ ವಿವಿಧ ಯೋಜನೆಗಳಿಗೆ ಸಾವಿರ ಕೋಟಿ ಬಳಸಿಕೊಳ್ಳಲಾಗುವುದು ಎಂದರು. 200 ಕೋಟಿ ರೂಪಾಯಿ ವೆಚ್ಚದಲ್ಲಿ ಸರ್ ಎಂ. ವಿಶ್ವೇಶ್ವರಯ್ಯ ಕಟ್ಟಡ ನಿರ್ಮಾಣ ಅಕಾಡೆಮಿ ಸ್ಥಾಪಿಸಲಾಗುವುದು. ಅಧಿಕಾರಿಗಳಿಗೆ ಮತ್ತು ಕಟ್ಟಡ ಕಾರ್ಮಿಕರಿಗೆ ಅಕಾಡೆಮಿಯಲ್ಲಿ ತರಬೇತಿ ನೀಡಲಾಗುವುದು ಎಂದು ತಿಳಿಸಿದರು.ರಾಜ್ಯದಲ್ಲಿ 100 ಕೌಶಲ್ಯ ಕೇಂದ್ರಗಳನ್ನು ಆರಂಭಿಸಿ ಕಟ್ಟಡ ಕಾರ್ಮಿಕರಿಗೆ ಕೌಶಲ್ಯ ವೃದ್ಧಿಸುವ ತರಬೇತಿ ನೀಡಲಾಗುವುದು ಎಂದು ತಿಳಿಸಿದರು.
ಹಸ್ತಕ್ಷೇಪ ಇಲ್ಲ: ಬಳ್ಳಾರಿ ಜಿಲ್ಲಾಡಳಿತದಲ್ಲಿ ತಾವು ಅನಗತ್ಯವಾಗಿ ಹಸ್ತಕ್ಷೇಪ ಮಾಡಿಲ್ಲ ಎಂದು ಜಿಲ್ಲಾ ಉಸ್ತುವಾರಿ ಸಚಿವರು ಆಗಿರುವ ಪರಮೇಶ್ವರ ನಾಯಕ್ ತಿಳಿಸಿದರು.
ಬಳ್ಳಾರಿ ಅಭಿವೃದ್ಧಿಗೆ ಕೆಲವರು ಅಡ್ಡಿ ಮಾಡುತ್ತಿದ್ದಾರೆ ಎಂದು ಶಾಸಕ ಅನಿಲ್ ಲಾಡ್ ನೀಡಿರುವ ಹೇಳಿಕೆಗೆ ಪ್ರತಿಕ್ರಿಯಿಸಿದ ಸಚಿವರು, ಅನಿಲ್ ಲಾಡ್ ಜತೆ ಯಾವುದೇ ರೀತಿಯ ಭಿನ್ನಾಭಿಪ್ರಾಯ ಇಲ್ಲ. ತಾವು ಸಚಿವ ಸ್ಥಾನಕ್ಕೂ ಲಾಬಿ ಮಾಡಿಲ್ಲ. ಪಕ್ಷದ ಹೈಕಮಾಂಡ್ ನಿರ್ದೇಶನದಂತೆ ನಡೆದುಕೊಂಡಿದ್ದೇನೆ ಎಂದು ತಿಳಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.