ಬೀದರ್: ಕಾರ್ಮಿಕರ ಮನೆ ಬಾಗಿಲಿಗೆ ಸರ್ಕಾರದ ವಿವಿಧ ಯೋಜನೆಗಳನ್ನು ತಲುಪಿಸುವ ಕೆಲಸ ಆಗಬೇಕು ಎಂದು ಶಾಸಕ ಬಂಡೆಪ್ಪ ಕಾಶೆಂಪೂರ್ ನುಡಿದರು.
ವಿಶ್ವ ಕಾರ್ಮಿಕ ದಿನಾಚರಣೆ ಪ್ರಯುಕ್ತ ಕರ್ನಾಟಕ ಕಟ್ಟಡ ಇತರ ನಿರ್ಮಾಣ ಮತ್ತು ಕೂಲಿ ಕಾರ್ಮಿಕರ ಸಂಘವು ನಗರದ ಅಂಬೇಡ್ಕರ್ ಭವನದಲ್ಲಿ ಏರ್ಪಡಿಸಿದ್ದ ಕಾರ್ಮಿಕರ ಜಾಗೃತಿ ಸಮಾವೇಶವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಅರ್ಹ ಕಾರ್ಮಿಕರಿಗೆ ಸೌಲಭ್ಯಗಳನ್ನು ಕಲ್ಪಿಸುವ ನಿಟ್ಟಿನಲ್ಲಿ ಸರ್ಕಾರ ಕಾರ್ಮಿಕ ಇಲಾಖೆಯತ್ತ ಹೆಚ್ಚಿನ ಗಮನ ಹರಿಸಬೇಕು. ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಕ್ರಮ ತೆಗೆದುಕೊಳ್ಳಬೇಕು ಎಂದು ಒತ್ತಾಯಿಸಿದರು.
ಕಾರ್ಮಿಕರಿಗಾಗಿ ಸರ್ಕಾರ ರೂಪಿಸಿರುವ ಯೋಜನೆಗಳ ಕುರಿತು ಜಾಗೃತಿ ಮೂಡಿಸಬೇಕು. ಅರ್ಹರಾದವರು ಯೋಜನೆಗಳ ಲಾಭ ಪಡೆಯಬೇಕು ಎಂದು ಸಲಹೆ ಮಾಡಿದರು.
ಸರ್ಕಾರದ ಯೋಜನೆಗಳ ಪ್ರಯೋಜನ ಪಡೆಯಲು ಕಾರ್ಮಿಕರು ಕಡ್ಡಾಯವಾಗಿ ಇಲಾಖೆಯಲ್ಲಿ ತಮ್ಮ ಹೆಸರು ನೋಂದಾಯಿಸಿ ಗುರುತಿನ ಚೀಟಿ ಪಡೆಯಬೇಕು ಎಂದು ಜಿಲ್ಲಾ ಕಾರ್ಮಿಕ ಅಧಿಕಾರಿ ಧರಣೇಶ ತಿಳಿಸಿದರು.
ಮಹಿಳೆಯರು ಮತ್ತು ಪುರುಷ ಕಾರ್ಮಿಕರಿಗೆ ಕೆಲಸಕ್ಕೆ ಸರಿಸಮನಾದ ಕೂಲಿ ಕೊಡಬೇಕು ಎಂದು ವಿಶೇಷ ಉಪನ್ಯಾಸ ನೀಡಿದ ರೇಷ್ಮಾ ಹಂಸರಾಜ್ ಹೇಳಿದರು.
ಶಿವಶರಣಪ್ಪ ಹುಗ್ಗಿ ಪಾಟೀಲ ಮಾತನಾಡಿದರು. ನಗರಸಭೆ ಮಾಜಿ ಸದಸ್ಯ ದೇವೇಂದ್ರ ಸೋನಿ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ಕಾಂಗ್ರೆಸ್ ಎಸ್ಸಿ ಘಟಕದ ಅಧ್ಯಕ್ಷ ಶಂಕರರಾವ್ ದೊಡ್ಡಿ, ಎಂಜಿನಿಯರ್ ಮಹ್ಮದ್ಮನ್ಸೂರ್ ಖಾದ್ರಿ, ಸಂಘದ ಜಿಲ್ಲಾ ಅಧ್ಯಕ್ಷ ಪಂಢರಿ ಪೂಜಾರಿ, ಪ್ರಮುಖರಾದ ಶಿವರಾಜ ಜಮಿಸ್ತಾನಪುರ, ಅನಿಲ ಗಂಜಕರ್ ಇದ್ದರು.