ಬೀದರ್: ಸರ್ಕಾರದ ಎಲ್ಲ ಯೋಜನೆಗಳನ್ನು ನಿಗದಿತ ಕಾಲಮಿತಿ ಯೊಳಗೆ ಪೂರ್ಣಗೊಳಿಸ ಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ರೇವು ನಾಯಕ್ ಬೆಳಮಗಿ ಬುಧವಾರ ಅಧಿಕಾರಿಗಳಿಗೆ ಸೂಚಿಸಿದರು.
ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ನಡೆದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು `ಅಧಿಕಾರ ಶಾಶ್ವತ ಅಲ್ಲ. ಪದವಿ ಶಾಶ್ವತ ಅಲ್ಲ. ಜನರಿಗೆ ಸೌಲಭ್ಯಗಳನ್ನು ತಲುಪಿಸುವುದಕ್ಕಾಗಿ ನಮ್ಮ ಹುದ್ದೆ ಬಳಸುವ ಅಗತ್ಯವಿದೆ~ ಎಂದು ಹೇಳಿದರು.
ಸುವರ್ಣ ಗ್ರಾಮ ಯೋಜನೆ, ಭಾಗ್ಯಲಕ್ಷ್ಮಿ, ಮಡಿಲು ಕಿಟ್ ವಿತರಣೆ, ಉಚಿತ ಸೈಕಲ್ ವಿತರಣೆ ಸೇರಿದಂತೆ ಎಲ್ಲ ಯೋಜನೆಗಳನ್ನು ಜನರಿಗೆ ತಲುಪಿಸುವುದಕ್ಕಾಗಿ ಅಧಿಕಾರಿಗಳ ಕಾಲಮಿತಿ ನಿಗದಿಪಡಿಸಿಕೊಂಡು ಕೆಲಸ ಮಾಡಬೇಕು ಎಂದು ಅವರು ಸೂಚಿಸಿದರು.
ಹುಮನಾಬಾದ್ ಶಾಸಕ ರಾಜಶೇಖರ ಪಾಟೀಲ್ ಮಾತನಾಡಿ ತಾತ್ಕಾಲಿಕ ಪಡಿತರ ಚೀಟಿ ವಿತರಣೆಯಲ್ಲಿ ಅರ್ಹರನ್ನು ಕೈ ಬಿಡಲಾಗಿದೆ. ಇದರಿಂದ ನಿಜವಾದ ಬಡವರಿಗೆ ಅನ್ಯಾಯವಾಗುತ್ತಿದೆ. ಪಡಿತರ ಚೀಟಿ ಇಲ್ಲದಿರುವ ಕಾರಣ ನೀಡಿ ವಿಧವಾ ವೇತನ, ಸಂಧ್ಯಾ ಸುರಕ್ಷಾ ಯೋಜನೆಯ ವೇತನ, ಅಂಗವಿಕಲರ ವೇತನಗಳನ್ನು ನಿಲ್ಲಿಸಲಾಗುತ್ತಿದೆ. ಇದು ಸರಿಯಾದ ಕ್ರಮವಲ್ಲ ಎಂದು ಆಕ್ಷೇಪ ವ್ಯಕ್ತಪಡಿಸಿದರು.