ನವದೆಹಲಿ (ಐಎಎನ್ಎಸ್): ಚಿತ್ರೀಕರಣಗೊಂಡಿರುವ ತಮ್ಮ ಅನೇಕ ಚಿತ್ರಗಳ ಡಬ್ಬಿಂಗ್ ಕಾರ್ಯ ಬಾಕಿ ಉಳಿದಿರುವುದರಿಂದಾಗಿ ನ್ಯಾಯಾಲಯಕ್ಕೆ ಶರಣಾಗಲು ಇನ್ನು ಹೆಚ್ಚಿನ ಕಾಲಾವಕಾಶವನ್ನು ಕೋರಿ ನಟ ಸಂಜಯ್ ದತ್ ಅವರು ಮಂಗಳವಾರ ಸುಪ್ರೀಂ ಕೋರ್ಟ್ನಲ್ಲಿ ಮನವಿ ಮಾಡಿಕೊಳ್ಳುವ ಸಾಧ್ಯತೆ ಇದೆ ಎಂದು ಸಂಜಯ್ ಪರ ಹಿರಿಯ ವಕೀಲ ಹರೀಶ್ ಸಾಳ್ವೆ ಸೋಮವಾರ ತಿಳಿಸಿದರು.
1993ರ ಮುಂಬೈ ಸರಣಿ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಅಕ್ರಮ ಶಸ್ತ್ರಾಸ್ತ್ರ ಹೊಂದಿರುವ ಆರೋಪಕ್ಕಾಗಿ ಬಾಲಿವುಡ್ ನಟ ಸಂಜಯ್ ದತ್ ಅವರಿಗೆ ಸುಪ್ರೀಂ ಕೋರ್ಟ್ ಐದು ವರ್ಷ ಜೈಲು ಶಿಕ್ಷೆ ವಿಧಿಸಿತ್ತು.
ಇದರೊಂದಿಗೆ ಪ್ರಕರಣಕ್ಕೆ ಸಂಬಂಧಿಸಿದ ಎಲ್ಲಾ ಆರೋಪಿಗಳು ನಾಲ್ಕು ವಾರದೊಳಗೆ ನ್ಯಾಯಾಲಯಕ್ಕೆ ಶರಣಾಗಬೇಕೆಂದು ತಾಕೀತು ಮಾಡಿತ್ತು.
ಈಗಾಗಲೇ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಜಯ್ ದತ್ ಅವರು ಒಂದೂವರೆ ವರ್ಷ ಜೈಲು ಶಿಕ್ಷೆಯನ್ನು ಅನುಭವಿಸಿದ್ದಾರೆ. ಇನ್ನೂ ಮೂರೂವರೆ ವರ್ಷ ಜೈಲು ಶಿಕ್ಷೆಯನ್ನು ಅನುಭವಿಸಬೇಕಿದೆ.