ಬೆಂಗಳೂರು: `ಪರಿಸರದ ಬಗ್ಗೆ ಅರಿವು ಮೂಡಿಸಲು ಕಾಲೇಜುಗಳಲ್ಲಿ ಪರಿಸರ ಘಟಕವನ್ನು ರಚಿಸುವ ಬಗ್ಗೆ ಈಗಾಗಲೇ ಚಿಂತನೆ ನಡೆಸಲಾಗಿದೆ~ ಎಂದು ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಅಧ್ಯಕ್ಷ ಎ.ಎಸ್.ಸದಾಶಿವಯ್ಯ ಹೇಳಿದರು.
ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯು ನಗರದಲ್ಲಿ ಗುರುವಾರ ಆಯೋಜಿಸಿದ್ದ `ಪರಿಸರ ಮಾಲಿನ್ಯ ನಿಯಂತ್ರಣದಲ್ಲಿ ವೃತ್ತಿ ಸಂಸ್ಥೆಗಳು ಮತ್ತು ವಿಶ್ವವಿದ್ಯಾಲಯಗಳು ತೆಗೆದುಕೊಳ್ಳಬೇಕಾದ ಕ್ರಮಗಳು~ ಕುರಿತು ಕಾರ್ಯಾಗಾರದಲ್ಲಿ ಅವರು ಮಾತನಾಡಿದರು.
`ಪರಿಸರವನ್ನು ಸಂರಕ್ಷಿಸುವ ಬಗ್ಗೆ ಇಂದಿನ ಯುವಪೀಳಿಗೆಯಲ್ಲಿ ಆಸಕ್ತಿ ಇದೆ. ಆದರೆ ಅದಕ್ಕೆ ಸೂಕ್ತ ವೇದಿಕೆ ಒದಗಿಸುವ ಕಾರ್ಯ ನಡೆಯಬೇಕಿದೆ. ಎನ್ಎಸ್ಎಸ್ ಮತ್ತು ಎನ್ಸಿಸಿ ಘಟಕಗಳಂತೆ ಪರಿಸರ ಘಟಕಗಳನ್ನು ಸ್ಥಾಪಿಸುವ ಮೂಲಕ ಪರಿಸರ ಸಂರಕ್ಷಣಾ ಕಾರ್ಯಕ್ಕೆ ಕೈಜೋಡಿಸಬೇಕು~ ಎಂದು ಹೇಳಿದರು.
`ಕೆಲವು ಕೈಗಾರಿಕೆಗಳು ಭಾರಿ ಪ್ರಮಾಣದಲ್ಲಿ ತ್ಯಾಜ್ಯವನ್ನು ಹೊರಹಾಕುತ್ತಿರುವುದರಿಂದ ಪರಿಸರ ಮಾಲಿನ್ಯ ಹೆಚ್ಚಾಗಿದೆ. ಕೈಗಾರಿಕೆಗಳನ್ನು ಪರಿಸರ ಸ್ನೇಹಿ ಘಟಕಗಳಾಗಿ ರೂಪಿಸಲು ತ್ಯಾಜ್ಯ ನಿರ್ವಹಣಾ ಕೇಂದ್ರದ ಅಗತ್ಯವಿದ್ದು, ಈ ನಿಟ್ಟಿನಲ್ಲಿಯೂ ಮಂಡಳಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಿದೆ~ ಎಂದು ಹೇಳಿದರು.
ಮಂಡಳಿಯ ಸದಸ್ಯ ಪ್ರೊ.ಎಸ್.ಎಸ್.ಗದಗ್, ಸದಸ್ಯ ಕಾರ್ಯದರ್ಶಿ ಎಸ್.ಎಂ.ಪುಟ್ಟಬುದ್ದಿ, ಹಿರಿಯ
ಪರಿಸರಾಧಿಕಾರಿ ಎಸ್.ನಂದಕುಮಾರ್, ಭಾರತ ವಿಜ್ಞಾನ ಮಂದಿರದ ಅಧ್ಯಾಪಕ ಚಾಣುಕ್ಯ ಇತರರು ಉಪಸ್ಥಿತರಿದ್ದರು.