ಶ್ರೀರಂಗಪಟ್ಟಣ: ತಮಿಳುನಾಡಿಗೆ ನೀರು ಹರಿಸುತ್ತಿರುವುದರಿಂದ ನೀರಿನ ಕೊರತೆ ಉಂಟಾಗಿದೆ. ಆದ್ದರಿಂದ ಮಂಡ್ಯ ಜಿಲ್ಲೆಯ ರೈತರಿಗೆ ಸರ್ಕಾರ ಪ್ರತಿ ಎಕರೆ ಬೆಳೆಗೆ ರೂ.25 ಸಾವಿರ ಪರಿಹಾರ ಕೊಡಬೇಕು ಎಂದು ಶಾಸಕ ರಮೇಶ ಬಂಡಿಸಿದ್ದೇಗೌಡ ಆಗ್ರಹಿಸಿದರು.ತಾಲ್ಲೂಕಿನ ಕೆ.ಶೆಟ್ಟಹಳ್ಳಿಯಲ್ಲಿ ಭಾನುವಾರ ರೂ.5 ಲಕ್ಷ ವೆಚ್ಚದ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿ ಮಾತನಾಡಿದ ಅವರು ಪ್ರತಿದಿನ 10 ಸಾವಿರ ಕ್ಯೂಸೆಕ್ ಕಾವೇರಿ ನೀರನ್ನು ತಮಿಳುನಾಡಿಗೆ ಹರಿಸುವಂತೆ ಸುಪ್ರೀಂ ಕೋರ್ಟ್ ರಾಜ್ಯ ಸರ್ಕಾರಕ್ಕೆ ಸೂಚಿಸಿದೆ. ಆದರೆ, ಕೃಷ್ಣರಾಜಸಾಗರ ಜಲಾಶಯದಿಂದ ಅದಕ್ಕಿಂತಲೂ ಹೆಚ್ಚು ನೀರು ಹರಿದು ಹೋಗುತ್ತಿದೆ ಎಂದರು.
ಬೆಳಗಿನ ಸಮಯದಲ್ಲಿ 10 ಸಾವಿರ ಕ್ಯೂಸೆಕ್ ನೀರು ಹರಿಸುತ್ತಿದ್ದು ರಾತ್ರಿ ವೇಳೆ ಅದಕ್ಕಿಂತಲೂ ಹೆಚ್ಚು ನೀರು ಹರಿದು ಹೋಗುತ್ತಿದೆ. ಕಾವೇರಿ ನೀರಾವರಿ ನಿಗಮದ ಅಧಿಕಾರಿಗಳು ತಪ್ಪು ಮಾಹಿತಿ ನೀಡುತ್ತಿದ್ದು ಜಿಲ್ಲೆಯ ಜನಪ್ರತಿನಿಧಿಗಳು ಹಾಗೂ ಜನರನ್ನು ವಂಚಿಸುತ್ತಿದ್ದಾರೆ ಎಂದು ದೂರಿದರು.
ತಾಲ್ಲೂಕು ಪಂಚಾಯಿತಿ ಅಧ್ಯಕ್ಷೆ ರಾಜೇಶ್ವರಿ ನಂದೀಶ್ ಕುಮಾರ್, ಮಾಜಿ ಅಧ್ಯಕ್ಷ ಬಿ.ಎಸ್.ಸಂದೇಶ್, ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಎಂ.ಸ್ವಾಮಿ, ಉಪಾಧ್ಯಕ್ಷ ಬಿ.ಚಂದ್ರಶೇಖರ್, ಶ್ರೀಕಂಠಯ್ಯ, ನಿಜಲಿಂಗು, ರವಿ, ದೀಪು, ರಾಜಣ್ಣ, ಎಪಿಎಂಸಿ ನಿರ್ದೇಶಕ ಸಿ.ಸುರೇಶ್ ಇದ್ದರು.