ರಾಜರಾಜೇಶ್ವರಿನಗರ: `ರೈತರ ಹಿತ ಕಾಪಾಡುವ ದೃಷ್ಟಿಯಿಂದ ಕಾವೇರಿ ನೀರಿನ ಬಗ್ಗೆ ರಾಜ್ಯ ಸರ್ಕಾರ ಸರಿಯಾದ ಅಂಕಿ ಅಂಶಗಳನ್ನು ಸುಪ್ರೀಂ ಕೋರ್ಟ್ಗೆ ಸಲ್ಲಿಸಬೇಕು' ಎಂದು ಓಂಕಾರ ಆಶ್ರಮದ ಮಧುಸೂದನಾನಂದ ಸ್ವಾಮೀಜಿ ಒತ್ತಾಯಿಸಿದರು.
ತಮಿಳುನಾಡಿಗೆ ಕಾವೇರಿ ನೀರು ಬಿಟ್ಟಿರುವ ರಾಜ್ಯ ಸರ್ಕಾರದ ಕ್ರಮವನ್ನು ಖಂಡಿಸಿ ಮಂಡ್ಯದಲ್ಲಿ ಕಾವೇರಿ ಹಿತರಕ್ಷಣಾ ಸಮಿತಿ ನಡೆಸುತ್ತಿರುವ ಹೋರಾಟಕ್ಕೆ ಬೆಂಬಲ ಸೂಚಿಸಿ ಕರ್ನಾಟಕ ರಾಜ್ಯ ಕಾರ್ಮಿಕರ ಹಿತರಕ್ಷಣಾ ಟ್ರಸ್ಟ್, ಜಯಕರ್ನಾಟಕ ಆಶ್ರಯದಲ್ಲಿ ರಾಜರಾಜೇಶ್ವರಿನಗರದಿಂದ ಮಂಡ್ಯದವರೆಗೆ ಹಮ್ಮಿಕೊಂಡಿರುವ ಬೈಕ್ ರ್ಯಾಲಿಗೆ ಚಾಲನೆ ನೀಡಿ ಮಾತನಾಡಿದರು.
ಕಾರ್ಮಿಕ ಹಿತರಕ್ಷಣಾ ಸಮಿತಿ ಅಧ್ಯಕ್ಷ ಡಿ.ಸಿ.ಪಾಪಣ್ಣ, `ರೈತರಿಗೆ ರಾಜ್ಯ ಸರ್ಕಾರದಿಂದ ನಿರಂತರ ಅನ್ಯಾಯವಾಗುತ್ತಿದೆ. ಇದನ್ನು ತಡೆಯಲು ಸಂಘಟಿತ ಹೋರಾಟ ಅಗತ್ಯ' ಎಂದರು.