ಮಂಡ್ಯ: ತಮಿಳುನಾಡಿಗೆ ನೀರು ಬಿಡುತ್ತಿರುವ ಸರ್ಕಾರದ ಕ್ರಮ ವಿರೋಧಿಸಿ ನಗರದಲ್ಲಿ ಜಿಲ್ಲಾ ರೈತ ಹಿತರಕ್ಷಣಾ ಸಮಿತಿಯಿಂದ ಹಮ್ಮಿಕೊಂಡಿರುವ ಸರಣಿ ಉಪವಾಸ ಸತ್ಯಾಗ್ರಹದಲ್ಲಿ ಗುರುವಾರ ಸಮಿತಿ ಅಧ್ಯಕ್ಷ ಜಿ. ಮಾದೇಗೌಡ ಅವರು ಉಪವಾಸ ಆರಂಭಿಸಿದ್ದು, ಇದೇ ವೇಳೆ ಪ್ರತಿಪಕ್ಷದ ನಾಯಕ ಸಿದ್ಧರಾಮಯ್ಯ ಅವರು ಸತ್ಯಾಗ್ರಹ ಸ್ಥಳಕ್ಕೆ ಆಗಮಿಸಿದ ಸಮಯದಲ್ಲಿ ಉಂಟಾದ ಗಲಭೆ ಚದುರಿಸಲು ಪೊಲೀಸರು ಲಘು ಲಾಠಿ ಪ್ರಹಾರ ನಡೆಸಿದರು.
ಪ್ರತಿಭಟನೆಗೆ ಬೆಂಬಲ ವ್ಯಕ್ತಪಡಿಸಲು ಸಿದ್ಧರಾಮಯ್ಯ ಅವರು ಸತ್ಯಾಗ್ರಹ ಸ್ಥಳಕ್ಕೆ ಆಗಮಿಸಿ ಪ್ರತಿಭಟನಾಕಾರರನ್ನು ಉದ್ದೇಶಿಸಿ ಭಾಷಣ ಮಾಡಲು ಪ್ರಾರಂಭಿಸುತ್ತಿದ್ದಂತೆ ಕೆರಳಿದ ಪ್ರತಿಭಟನಾಕಾರರು `ನಮಗೆ ರಾಜಕಾರಣಿಗಳ ಬೆಂಬಲ ಬೇಕಿಲ್ಲ~ ಎಂದು ಘೋಷಣೆ ಕೂಗುತ್ತ, ಚಪ್ಪಲಿ ತೋರಿಸಿ ಅವರ ಭಾಷಣಕ್ಕೆ ಅಡ್ಡಿ ಉಂಟುಮಾಡಿದರು. ನಂತರ ಸಿದ್ಧರಾಮಯ್ಯ ಅವರು ವೇದಿಕೆಯಿಂದ ಕೆಳಗಿಳಿಯುತ್ತಿದ್ದಂತೆ ಅವರಿಗೆ ಮುತ್ತಿಗೆ ಹಾಕಲು ಮುಂದಾದ ಪ್ರತಿಭಟನಾಕಾರರನ್ನು ಚದುರಿಸಲು ಪೊಲೀಸರು ಲಘು ಲಾಠಿ ಪ್ರಹಾರ ನಡೆಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಮಾದೇಗೌಡ ಅವರು `ನಾವು ಸರ್ಕಾರಕ್ಕೆ ಗಡುವು ನೀಡಿದ್ದೇವೆ. ಒಂದು ವೇಳೆ ಸರ್ಕಾರ ಇಂದು ಸಂಜೆಯೊಳಗೆ ನೀರು ಬಿಡುವುದನ್ನು ನಿಲ್ಲಿಸದಿದ್ದರೆ ಜನರು ಕರ ನಿರಾಕರಣೆ ಮಾಡುವ ಮೂಲಕ ಶಾಸನಭಂಗ ಚಳವಳಿ ನಡೆಸುವರು~ ಎಂದು ತಿಳಿಸಿದರು.
ಪ್ರತಿಭಟನಾ ಸ್ಥಳಕ್ಕೆ ಬೆಂಬಲ ಸೂಚಿಸಲು ವಿವಿಧ ಸ್ಥಳಗಳಿಂದ ರೈತರು ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಪ್ರತಿಭಟನಾ ಸ್ಥಳದಲ್ಲಿ ಭಾರಿ ಭದ್ರತಾ ವ್ಯವಸ್ಥೆ ಕಲ್ಪಿಸಿದೆ.