ಯಲಹಂಕ: ಜಾಲಾ ಹೋಬಳಿ ಮರಳುಕುಂಟೆ ಗ್ರಾಮದಲ್ಲಿ ನಡೆದ ಪದ್ಮಾವತಿ ಅಮ್ಮನವರ ಸಮೇತ ಲಕ್ಷ್ಮೀವೆಂಕಟರಮಣಸ್ವಾಮಿ ದೇವಾಲಯದ ಜೀರ್ಣೋದ್ಧಾರ ಮತ್ತು ಕುಂಭಾಭಿಷೇಕ ಮಹೋತ್ಸವ ಸಮಾರಂಭವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಕೃಷಿ ಸಚಿವ ಕೃಷ್ಣಬೈರೇಗೌಡ, ಹೆಚ್ಚಿನ ಸಂಖ್ಯೆಯಲ್ಲಿ ರೈತ ಕುಟುಂಬಗಳೇ ವಾಸವಾಗಿರುವ ಈ ಗ್ರಾಮದಲ್ಲಿ ಎಲ್ಲರೂ ಸೇರಿ ಸುಮಾರು 5 ವರ್ಷಗಳ ಸತತ ಪ್ರಯತ್ನದಿಂದ ಪುರಾತನ ಶೈಲಿಯಲ್ಲಿ ಸುಂದರವಾದ ದೇವಾಲಯವನ್ನು ನಿರ್ಮಿಸಿರುವುದು ವಿಶೇಷವಾಗಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ಮಾಜಿ ಲೋಕಸಭಾ ಸದಸ್ಯ ಸಿ.ನಾರಾಯಣಸ್ವಾಮಿ, ಮಾಜಿ ಸಚಿವ ಎಚ್.ಎಂ. ರೇವಣ್ಣ ಉಪಸ್ಥಿತರಿದ್ದರು.