ಗುಲ್ಬರ್ಗ: ಇಲ್ಲಿನ ಮಿಲ್ಲತ್ ನಗರ ಬಡಾವಣೆಗೆ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಬೇಕೆಂದು ಆಗ್ರಹಿಸಿ ಸೋಶಿಯಲ್ ಡೆಮಾಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್ಡಿಪಿಐ) ಸಂಘಟನೆ ವತಿಯಿಂದ ಅಲ್ಲಿನ ನಿವಾಸಿಗಳು ಗುರುವಾರ ಹುಮನಾಬಾದ ಕ್ರಾಸ್ ಬಳಿ ಗುರುವಾರ ರಾಷ್ಟ್ರೀಯ ಹೆದ್ದಾರಿ ಬಂದ್ ಮಾಡಿ ಪ್ರತಿಭಟನೆ ನಡೆಸಿದರು.
ಸುಮಾರು 15 ವರ್ಷಗಳಿಂದ ಕುಡಿಯುವ ನೀರಿನ ವ್ಯವಸ್ಥೆ ಇಲ್ಲದೆ ಇರುವುದರಿಂದ ಇಲ್ಲಿಯ ನಿವಾಸಿಗಳಿಗೆ ತೀವ್ರ ತೊಂದರೆಯಾಗುತ್ತಿದೆ. ಈ ಬಗ್ಗೆ ಸಂಬಂಧಿಸಿದ ಅಧಿಕಾರಿಗಳಿಗೆ, ಪಾಲಿಕೆ ಸದಸ್ಯರಿಗೆ, ಶಾಸಕರಿಗೆ ದೂರು ಸಲ್ಲಿಸಿದ್ದರೂ ಈವರೆಗೆ ಯಾವುದೇ ಪ್ರಯೋಜನವಾಗಿಲ್ಲ ಎಂದು ಪ್ರತಿಭಟನಾಕಾರರು ದೂರಿದರು.
ಕುಡಿಯುವ ನೀರಿಗೆ ಆಗ್ರಹಿಸಿ ಈ ಮುಂಚೆ ಜಿಲ್ಲಾಧಿಕಾರಿ ಕಚೇರಿ ಎದುರು ಧರಣಿ ಕೂಡಲು ನಿರ್ಧರಿಸಿದಾಗ ಡಿಸೆಂಬರ್ 2011ರೊಳಗಾಗಿ ನೀರಿನ ವ್ಯವಸ್ಥೆ ಕಲ್ಪಿಸಲಾಗುವುದು ಎಂದು ಲಿಖಿತ ಭರವಸೆ ನೀಡಿದ್ದರು.
ಆದರೆ ಈವರೆಗೂ ಯಾರೂ ಕೂಡ ನೀರಿನ ವ್ಯವಸ್ಥೆ ಒದಗಿಸಲು ವಿಫಲರಾಗಿದ್ದಾರೆ. ಈ ಕುರಿತು ಜಲ ಮಂಡಳಿ ಅಧಿಕಾರಿಗಳಿಗೆ ವಿಚಾರಿಸಿದರೆ `ಮೊದಲು ಹಣ ಕೊಡಿ ಆ ಮೇಲೆ ನೀರು ಕೊಡುವುದಾಗಿ~ ಬೇಜವಾಬ್ದಾರಿ ಉತ್ತರ ನೀಡುತ್ತಿದ್ದಾರೆ ಎಂದು ಆಪಾದಿಸಿದರು.
ರಾಷ್ಟ್ರೀಯ ಹೆದ್ದಾರಿ ಬಂದ್ ಮಾಡಿ ಪ್ರತಿಭಟನೆ ನಡೆಸಿದ್ದರಿಂದ ಕೆಲ ಹೊತ್ತು ರಸ್ತೆ ಸಂಚಾರ ಅಸ್ತವ್ಯಸ್ತವಾಗಿತ್ತು. ಎಸ್ಡಿಪಿಐ ಪದಾಧಿಕಾರಿಗಳು ಹಾಗೂ ಅಲ್ಲಿನ ನೂರಾರು ನಿವಾಸಿಗಳು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.