ಅರಸೀಕೆರೆ: ತಾಲ್ಲೂಕಿನ ಎ.ಮಲ್ಲಾಪುರ ಗ್ರಾಮದಲ್ಲಿ ಎರಡು ವರ್ಷಗಳಿಂದ ಕುಡಿಯುವ ನೀರಿಗೆ ತತ್ವಾರ ಉಂಟಾಗಿದ್ದರೂ ಸಮಸ್ಯೆ ಬಗೆಹರಿಸಲು ಸಂಬಂಧಪಟ್ಟವರು ಕ್ರಮ ಕೈಗೊಂಡಿಲ್ಲ ಎಂದು ಗ್ರಾಮಸ್ಥರು ತಾಲ್ಲೂಕು ಕಚೇರಿ ಮುಂದೆ ಬುಧವಾರ ಪ್ರತಿಭಟನೆ ನಡೆಸಿದರು.
ತಾಲ್ಲೂಕಿನ ಬಾಣಾವರ ಹೋಬ ಳಿಯ ಎ.ಮಲ್ಲಾಪುರದಲ್ಲಿ ಕುಡಿ ಯುವ ನೀರಿನ ಅಭಾವ ತಲೆದೋ ರಿದೆ. ಈ ಸಮಸ್ಯೆ ಪರಿಹರಿಸುವಂತೆ ಜನಪ್ರತಿನಿಧಿಗಳು, ತಾಲ್ಲೂಕು ಆಡಳಿತಕ್ಕೆ ಹಲವು ಬಾರಿ ಮನವಿ ಪತ್ರ ಸಲ್ಲಿಸಿದ್ದರೂ ಇದುವರೆವಿಗೂ ಯಾವುದೇ ಪ್ರಯೋಜನವಾಗಿಲ್ಲ ಎಂದು ಪ್ರತಿಭಟನಾನಿರತರು ಆಕ್ರೋಶ ವ್ಯಕ್ತಪಡಿಸಿದರು.
ಮಳೆಯ ಅಭಾವದಿಂದಾಗಿ ಬರ ಪರಿಸ್ಥಿತಿ ಉಂಟಾಗಿದೆ. ಜತೆಗೆ ಈ ಭಾಗದಲ್ಲಿ ಅಂತರ್ಜಲ ತೀವ್ರವಾಗಿ ಕುಸಿದಿದ್ದು ಗ್ರಾಮದಲ್ಲಿರುವ ಕೊಳವೆ ಬಾವಿಗಳು ಬತ್ತಿವೆ. ಗ್ರಾಮದಲ್ಲಿ ನೀರಿನ ಸಮಸ್ಯೆ ಬಿಗಡಾಯಿಸಿದ್ದರೂ ಇತ್ತ ಗಮನಹರಿಸಿಲ್ಲ ಎಂದು ಅಧಿ ಕಾರಿಗಳು ಮತ್ತು ಜನಪ್ರತಿನಿಧಿಗಳ ವಿರುದ್ಧ ಕಿಡಿಕಾರಿದರು.
ಇನ್ನೆರಡು ದಿನಗಳಲ್ಲಿ ಗ್ರಾಮಕ್ಕೆ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸದಿದ್ದರೆ ಜಿಲ್ಲಾಧಿಕಾರಿ ಕಚೇರಿ ಎದುರು ಗ್ರಾಮಸ್ಥರು ಉಪವಾಸ ನಡೆಸುವುದಾಗಿ ಎಚ್ಚರಿಸಿದರು. ಬಳಿಕ ತಹಶೀಲ್ದಾರ್ ಜಗದೀಶ್ ಅವರಿಗೆ ಮನವಿ ಪತ್ರ ಸಲ್ಲಿಸಿದರು. ಗ್ರಾಮದ ಮುಖಂಡರಾದ ಹರೀಶ್, ಗಿರೀಶ್ ಮಹೇಶ್, ಮಂಜುನಾಥ್, ಯೋಗೀಶ್, ಲತಾ ರಾಧಾ, ರತ್ನಮ್ಮ, ಪದ್ಮಮ್ಮ, ಚನ್ನಮ್ಮ ಇದ್ದರು.