ಮಸ್ಕಿ: ಶಾಶ್ವತ ಕುಡಿಯುವ ನೀರಿನ ಯೋಜನೆಯ ಕಾಮಾಗಾರಿಯನ್ನು ಬರುವ ಮೂರು ತಿಂಗಳಲ್ಲಿ ಪೂರ್ಣಗೊಳಿಸಿ ಪಟ್ಟಣದ ಜನತೆಗೆ ಶುದ್ಧ ಕುಡಿಯುವ ನೀರು ಒದಗಿಸಲು ಕ್ರಮ ತೆಗೆದುಕೊಳ್ಳಲಾಗಿದೆ ಎಂದು ಶಾಸಕ ಪ್ರತಾಪಗೌಡ ಪಾಟೀಲ ಭಾನುವಾರ ತಿಳಿಸಿದರು.
ತುಂಗಭದ್ರಾ ಎಡದಂಡೆ ಕಾಲುವೆಯ ಮೂಲಕ ಕೆರೆಗೆ ನೀರು ತುಂಬಿಸುವ ತೂಬು ನಿರ್ಮಾಣದ ಕಾಮಾಗಾರಿಗೆ ಚಾಲನೆ ನೀಡಿ ಸುದ್ದಿಗಾರರ ಜೊತೆ ಮಾತನಾಡಿ, ರೂ. 7.10 ಕೋಟಿ ವೆಚ್ಚದ ಈ ಯೋಜನೆಯ ಕಾಮಗಾರಿ ಪ್ರಗತಿಯಲ್ಲಿದೆ ಎಂದರು.
ಬೆಟ್ಟದ ಮೇಲೆ ನಿರ್ಮಿಸಲಾಗುತ್ತಿರುವ ನೀರು ಶುದ್ಧೀಕರಣ ಘಟಕದ ಕಾಮಾಗಾರಿ ಬಹುತೇಕ ಪೂರ್ಣಗೊಂಡಿದೆ. ಕೆರೆ ನಿರ್ಮಿಸುವ ಕಾಮಾಗಾರಿಯೂ ಕೆಲ ತಾಂತ್ರಿಕ ತೊಂದರೆಗಳಿಂದ ವಿಳಂಬವಾಗಿದೆ ಎಂದು ತಿಳಿಸಿದರು. ಇದೀಗ ಕೆರೆ ನಿರ್ಮಾಣದ ಕಾಮಾಗಾರಿಯೂ ವೇಗ ಪಡೆದುಕೊಂಡಿದ್ದು, ಮೂರು ತಿಂಗಳ ಒಳಗಾಗಿ ಯೋಜನೆ ಪೂರ್ಣಗೊಳಿಸಿ ಪಟ್ಟಣದ ಜನತೆಗೆ ಶುದ್ಧ ಕುಡಿಯುವ ನೀರು ಪೂರೈಕೆ ಮಾಡಲಾಗುವುದು ಎಂದರು.
ಕೆರೆ ನಿರ್ಮಾಣದ ಕಾಮಾಗಾರಿ ಪರಿಶೀಲಿಸಿದ ಅವರು ಆದಷ್ಟು ಬೇಗನೆ ಉಳಿದ ಕಾಮಾಗಾರಿಗಳನ್ನು ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಕೆಲಸದ ಗುಣಮಟ್ಟದಲ್ಲಿ ಲೋಪ ಕಂಡು ಬಂದರೆ ಕ್ರಮ ಕೈಗೊಳ್ಳಲಾಗುವುದು ಎಂದರು.
ಜಿ. ಪಂ. ಸದಸ್ಯರಾದ ಮಹಾದೇವಪ್ಪಗೌಡ ಪೊಲೀಸ್ ಪಾಟೀಲ, ಎಚ್.ಬಿ. ಮುರಾರಿ, ತಾಲ್ಲೂಕು ಪಂಚಾಯ್ತಿ ಸದಸ್ಯ ಹನುಮಂತಪ್ಪ ಮೋಚಿ, ಎಪಿಎಂಸಿ ಅಧ್ಯಕ್ಷ ಮಂಜುನಾಥ ಪಾಟೀಲ, ಗ್ರಾಮ ಪಂಚಾಯ್ತಿ ಅಧ್ಯಕ್ಷೆ ದೇವಮ್ಮ ಸಾನಬಾಳ, ಮತ್ತಿತರರು ಇದ್ದರು.