ಚೆನ್ನೈ (ಪಿಟಿಐ): ಕೂಡುಂಕುಳಂ ಪರಮಾಣು ಸ್ಥಾವರ ಯೋಜನೆ ಬಿಕ್ಕಟ್ಟನ್ನು ಪರಿಹರಿಸುವ ಉದ್ದೇಶದಿಂದ ತಮಿಳುನಾಡು ಮುಖ್ಯಮಂತ್ರಿ ಜೆ.ಜಯಲಲಿತಾ ಹೊಸ ಹೆಜ್ಜೆಯನ್ನಿಟ್ಟಿದ್ದಾರೆ.
ಸ್ಥಾವರದ ಕುರಿತಾಗಿ ಸ್ಥಳೀಯ ನಿವಾಸಿಗಳಲ್ಲಿರುವ ಆತಂಕ ಮತ್ತು ಭಯಗಳ ಬಗ್ಗೆ ಪರಿಶೀಲಿಸುವುದಕ್ಕಾಗಿ ತಜ್ಞರ ಸಮಿತಿಯೊಂದನ್ನು ರಚಿಸಲಾಗುವುದು ಎಂದು ಜಯಲಲಿತಾ ಶನಿವಾರ ವಿಧಾನಸಭೆಯಲ್ಲಿ ಘೋಷಿಸಿದ್ದಾರೆ.
ಬಿಕ್ಕಟ್ಟಿನ ಪರಿಹಾರಕ್ಕಾಗಿ ಕೇಂದ್ರ ಸರ್ಕಾರದ ತಜ್ಞರ ಸಮಿತಿ ಮತ್ತು ಯೋಜನೆ ವಿರೋಧಿ ಪ್ರತಿಭಟನಾಕಾರರ ನಡುವಿನ ನಾಲ್ಕನೇ ಸುತ್ತಿನ ಮಾತುಕತೆಮುರಿದುಬಿದ್ದ ಹಿನ್ನೆಲೆಯಲ್ಲಿ ಜಯಲಲಿತಾ ಹೊಸ ತಜ್ಞರ ಸಮಿತಿ ರಚಿಸುವ ಘೋಷಣೆ ಮಾಡಿದ್ದಾರೆ.
ಒಂದು ವಾರ ನಡೆದ ವಿಧಾನಮಂಡಲದ ಅಧಿವೇಶನದಲ್ಲಿ ಮುಕ್ತಾಯ ಭಾಷಣ ಮಾಡಿದ ಜಯಲಲಿತಾ, ಜನವರಿ 31ರಂದು ಕೇಂದ್ರ ಸಮಿತಿ ಸದಸ್ಯರು ಮತ್ತು ಪ್ರತಿಭಟನಾಕಾರರ ಪ್ರತಿನಿಧಿಗಳ ನಡುವೆ ನಡೆದ ಕೊನೆಯ ಸಭೆ ಮುಕ್ತಾಯಗೊಂಡ ಬಳಿಕ ಕೇಂದ್ರದ ತಂಡವು ತನ್ನ ವರದಿಯನ್ನು ಸಲ್ಲಿಸಿದ್ದು, ಈ ವಿಚಾರದಲ್ಲಿ ತನ್ನ ಕೆಲಸ ಮುಗಿದಿದೆ ಎಂದು ತಿಳಿಸಿದೆ~ ಎಂದರು.