ಬಸವಾಪಟ್ಟಣ: ರೈತರು ತಾವು ಬೆಳೆದ ಉತ್ಪನ್ನಗಳ ಮಾರಾಟದಲ್ಲಿ ಸೂಕ್ತ ಬೆಲೆ ಪಡೆಯುವಲ್ಲಿ ವಿಫಲರಾಗಿದ್ದು, ಇದಕ್ಕೆ ಸೂಕ್ತ ಮಾರುಕಟ್ಟೆಯ ಸೌಲಭ್ಯ ಅಗತ್ಯ ಎಂದು ರಾಜ್ಯ ಕೃಷಿ ಮಾರಾಟ ಮಹಾಮಂಡಳಿಯ ಉಪ ಪ್ರಧಾನ ವ್ಯವಸ್ಥಾಪಕ ಮಹೇಂದ್ರಸಿಂಗ್ ನುಡಿದರು.
ಸಮೀಪದ ಕೋಟೆಹಾಳಿನಲ್ಲಿ ಈಚೆಗೆ ಧರ್ಮಸ್ಥಳ ಗ್ರಾಭಿವೃದ್ಧಿ ಯೋಜನೆಯ ವತಿಯಿಂದ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಕತ್ತಲಗೆರೆ ಕೃಷಿ ಸಂಶೋಧನಾ ಕೇಂದ್ರದ ವಿಜ್ಞಾನಿ ಡಾ.ಮಲ್ಲೇಶಪ್ಪ ಮಾತನಾಡಿ, ಭದ್ರಾ ಅಚ್ಚುಕಟ್ಟು ಪ್ರದೇಶದಲ್ಲಿ ಬತ್ತ ಮುಖ್ಯ ಬೆಳೆ ಆಗಿದ್ದು, ರೈತರು ಸಾಂಪ್ರದಾಯಿಕ ಪದ್ಧತಿ ಅನುಸರಿಸದೇ, ಕಡಿಮೆ ಅವಧಿ ಮತ್ತು ಕಡಿಮೆ ಖರ್ಚಿನಲ್ಲಿ ಅತಿ ಹೆಚ್ಚು ಲಾಭ ತರುವಂತಹ ವೈಜ್ಞಾನಿಕ ಕೃಷಿ ಅವಲಂಬಿಸಬೇಕು ಎಂದು ಸಲಹೆ ನೀಡಿದರು.
ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ನಿರ್ದೇಶಕ ಜೆ. ಚಂದ್ರಶೇಖರ್ ಪ್ರಾಸ್ತಾವಿಕ ಮಾತನಾಡಿದರು. ಮನು ವೈದ್ಯ ಸ್ವಾಗತಿಸಿದರು. ಸಂಗಮೇಶ್ ಕಾರ್ಯಕ್ರಮ ನಿರೂಪಿಸಿದರು. ನಾಗರತ್ನಾ ವಂದಿಸಿದರು.