ಚನ್ನಪಟ್ಟಣ: ಕೃಷಿ ಭೂಮಿ ಸ್ವಾಧೀನಪಡಿಸಿಕೊಂಡು ರೈತರನ್ನು ಒಕ್ಕಲೆಬ್ಬಿಸುತ್ತಿರುವ ರಾಜ್ಯ ಸರ್ಕಾರದ ನೀತಿ ವಿರೋಧಿಸಿ ಇದೇ 19 ಮತ್ತು 21ರಂದು ನವದೆಹಲಿಯ ಸಂಸತ್ ಭವನದ ಮುಂದೆ ಹಮ್ಮಿಕೊಂಡಿರುವ ಪ್ರತಿಭಟನೆಯಲ್ಲಿ ಕಸ್ತೂರಿ ಕರ್ನಾಟಕ ಜನಪರ ವೇದಿಕೆ ಕಾರ್ಯಕರ್ತರು ಪಾಲ್ಗೊಳ್ಳಲಿದ್ದಾರೆ ಎಂದು ವೇದಿಕೆ ರಾಜ್ಯಾಧ್ಯಕ್ಷ ಎಲ್.ರಮೇಶ್ಗೌಡ ತಿಳಿಸಿದ್ದಾರೆ.
ಈ ಸಂಬಂಧ ಪತ್ರಿಕಾ ಹೇಳಿಕೆ ನೀಡಿರುವ ಅವರು, ಭೂಸ್ವಾಧೀನ ಎಂಬ ಬ್ರಹ್ಮಾಸ್ತ್ರವನ್ನು ಬಡ ರೈತರ ಮೇಲೆ ಪ್ರಯೋಗಿಸುತ್ತಿರುವ ಸರ್ಕಾರ ಎರಡೂವರೆ ವರ್ಷದ ಅಧಿಕಾರಾವಧಿಯಲ್ಲಿ ಒಂದು ಲಕ್ಷ ಎಕರೆ ಭೂಮಿಯನ್ನು ಸ್ವಾಧೀನ ಪಡಿಸಿಕೊಂಡಿದೆ.ಮಾರ್ಚ್ ತಿಂಗಳಲ್ಲಿ ನಡೆದ ವಿಶ್ವ ಬಂಡವಾಳ ಹೂಡಿಕೆದಾರರ ಸಮಾವೇಶದ ನಂತರ ಮತ್ತೆ ಒಂದು ಲಕ್ಷ ಎಕರೆ ಭೂಮಿ ಸ್ವಾಧೀನಪಡಿಸಿಕೊಳ್ಳುವ ಹವಣಿಕೆಯಲ್ಲಿದೆ ಎಂದು ತಿಳಿಸಿದರು.
ಮಂದಗತಿಯಲ್ಲಿ ಸಾಗುತ್ತಿರುವ ರಾಜ್ಯದ ಪ್ರಮುಖ ರೈಲು ಮಾರ್ಗಗಳ ಕಾಮಗಾರಿಯನ್ನು ಶೀಘ್ರ ಪೂರ್ಣಗೊಳಿಸಬೇಕು.ಕೃಷ್ಣಾ ನದಿ ತೀರ್ಪಿನಿಂದ ರಾಜ್ಯಕ್ಕೆ ಆಗಿರುವ ಅನ್ಯಾಯವನ್ನು ಸರಿಪಡಿಸಬೇಕು, ಜಿಲ್ಲಾ ಕೇಂದ್ರ ರಾಮನಗರದಲ್ಲಿ ಪ್ರಮುಖ ರೈಲುಗಾಡಿಗಳ ನಿಲುಗಡೆ ಹಾಗೂ ಗಣಕೀಕೃತ ಟಿಕೆಟ್ ಕಾಯ್ದಿರಿಸುವಿಕೆ ವ್ಯವಸ್ಥೆ ಜಾರಿಗೊಳಿಸಬೇಕು,ಜೈವಿಕ ಸರಪಳಿಯ ಮೇಲೆ ದುಷ್ಪರಿಣಾಮ ಬೀರುವ ‘ಕುಲಾಂತರಿ ಬದನೆ’ ಬೆಳೆಗೆ ತಡೆ, ತೈಲ ಹಾಗೂ ಅಗತ್ಯ ವಸ್ತುಗಳ ಬೆಲೆಯನ್ನು ಸಾಮಾನ್ಯರ ಹಿತದೃಷ್ಟಿಯಿಂದ ಇಳಿಸಬೇಕು ಎಂಬ ಬೇಡಿಕೆ ಸೇರಿದಂತೆ ಒಟ್ಟು 13 ಪ್ರಮುಖ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಜಾಥಾ ನಡೆಸಲಾಗುತ್ತಿದೆ ಎಂದು ವೇದಿಕೆ ಪ್ರಧಾನ ಕಾರ್ಯದರ್ಶಿ ಇ.ತ.ಶ್ರೀನಿವಾಸ್ ತಿಳಿಸಿದ್ದಾರೆ.
ವೇದಿಕೆಯ ಸಾವಿರ ಕಾರ್ಯಕರ್ತರು ಬುಧವಾರ ಬೆಳಿಗ್ಗೆ ಬೆಂಗಳೂರಿನಿಂದ ನವದೆಹಲಿಗೆ ತೆರಳಿ 19 ಹಾಗೂ 21ರಂದು ಪ್ರತಿಭಟನೆ ನಡೆಸಲಿದ್ದಾರೆ.ನಂತರ ರಾಷ್ಟ್ರಪತಿ, ಪ್ರಧಾನಮಂತ್ರಿ ಹಾಗೂ ಸಂಬಂಧಿಸಿದ ಸಚಿವರಿಗೆ ಮನವಿ ಪತ್ರ ಸಲ್ಲಿಸುವುದಾಗಿ ತಿಳಿಸಿದ್ದಾರೆ.ಪ್ರತಿಭಟನೆಯಲ್ಲಿ ರೈತ ನಾಯಕರು, ರಾಜಕಾರಣಿಗಳು,ಮಠಾಧೀಶರು, ಪ್ರಮುಖ ಸಂಘಟನೆಗಳ ನಾಯಕರು ಭಾಗವಹಿಸಲಿದ್ದಾರೆ ಎಂದು ಅವರುಗಳು ಹೇಳಿಕೆಯಲ್ಲಿ ತಿಳಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.