ಬೆಂಗಳೂರು: `ಬೆಂಗಳೂರು ಕೃಷಿ ವಿಶ್ವವಿದ್ಯಾಲಯವು ಅಂತಿಮ ವರ್ಷದ ಕೃಷಿ ವಿದ್ಯಾರ್ಥಿಗಳಿಗೆ ಗ್ರಾಮೀಣ ಕಾರ್ಯಾನುಭವ ಕಾರ್ಯಕ್ರಮಕ್ಕೆ ಹೊಸ ರೂಪುರೇಷೆ ನೀಡಿದೆ. ಇದಕ್ಕಾಗಿ ರಾಜ್ಯ ಸರ್ಕಾರದ ಸಹಕಾರದಲ್ಲಿ ಹೋಬಳಿ ಮಟ್ಟದ ರೈತ ಸಂಪರ್ಕ ಕೇಂದ್ರಗಳಲ್ಲಿ ಅಂತಿಮ ವರ್ಷದ ಕೃಷಿ ವಿದ್ಯಾರ್ಥಿಗಳನ್ನು 3 ತಿಂಗಳ ಅವಧಿಗೆ ನಿಯೋಜಿಸಿ, ಪ್ರತಿ ತಿಂಗಳು 1500 ರೂಪಾಯಿ ಸ್ಟೈಫಂಡ್ ನೀಡುವ ಕಾರ್ಯಕ್ರಮವನ್ನು ಅನುಷ್ಠಾನ ಮಾಡಲಾಗಿದೆ~ ಎಂದು ಕುಲಪತಿ ಡಾ.ನಾರಾಯಣ ಗೌಡ ತಿಳಿಸಿದರು.
ಬುಧವಾರ ಇಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, `ಪ್ರತಿ ರೈತ ಸಂಪರ್ಕ ಕೇಂದ್ರದಲ್ಲಿ 10 ವಿದ್ಯಾರ್ಥಿಗಳಂತೆ 500ಕ್ಕೂ ಅಧಿಕ ವಿದ್ಯಾರ್ಥಿಗಳು ಜೂನ್ನಿಂದ ಸೆಪ್ಟೆಂಬರ್ ವರೆಗೆ ತರಬೇತಿ ಪಡೆದಿದ್ದಾರೆ. ಮುಂದಿನ ವರ್ಷ ಇನ್ನಷ್ಟು ವಿದ್ಯಾರ್ಥಿಗಳಿಗೆ ಗ್ರಾಮೀಣ ತರಬೇತಿ ನೀಡಲು ಕ್ರಮ ಕೈಗೊಳ್ಳಲಾಗುವುದು~ ಎಂದರು.
`ಪರೀಕ್ಷಾ ವ್ಯವಸ್ಥೆಯಲ್ಲಿ ಪಾರದರ್ಶಕತೆಯನ್ನು ಕಾಪಾಡಲು ಕೇಂದ್ರೀಕೃತ ಪರೀಕ್ಷಾ ವ್ಯವಸ್ಥೆಯನ್ನು ವೈಜ್ಞಾನಿಕ ರೀತಿಯಲ್ಲಿ ಅನುಷ್ಠಾನಗೊಳಿಸಲಾಗಿದ್ದು, ಪರೀಕ್ಷಾ ಕೊಠಡಿಗಳಿಗೆ ಸಿಸಿಟಿವಿ ಅಳವಡಿಸಲಾಗಿದೆ. ಮುಂದಿನ ವರ್ಷ ಅರಣ್ಯ ಮತ್ತು ಪರಿಸರ ವಿಜ್ಞಾನ ವಿಷಯದಲ್ಲಿ ಸ್ನಾತಕೋತ್ತರ ಪದವಿ ಆರಂಭಿಸಲಾಗುವುದು~ ಎಂದು ಮಾಹಿತಿ ನೀಡಿದರು.