ಮಂಡ್ಯ: ‘ಮುಂದಿನ ಲೋಕಸಭಾ ಚುನಾವಣೆಯಲ್ಲಿ ಮಂಡ್ಯ ಲೋಕಸಭಾ ಅಭ್ಯರ್ಥಿಯನ್ನಾಗಿ ಮಾಜಿ ಮುಖ್ಯಮಂತ್ರಿ, ಹಿರಿಯ ನಾಯಕ ಎಸ್.ಎಂ. ಕೃಷ್ಣ ಅವರನ್ನು ಆಯ್ಕೆ ಮಾಡಬೇಕು’
– ಹೀಗೆಂದು ಜಿಲ್ಲಾ ಕಾಂಗ್ರೆಸ್ ಸಮಿತಿ ಘಟಕದ ಅಧ್ಯಕ್ಷ, ಮಾಜಿ ಸಚಿವ ಎಂ.ಎಸ್. ಆತ್ಮಾನಂದ ಅವರು ಕೆಪಿಸಿಸಿ ಅಧ್ಯಕ್ಷ ಜಿ. ಪರಮೇಶ್ವರ್ ಅವರಿಗೆ ಪತ್ರ ಬರೆದಿದ್ದಾರೆ. ‘ಇದು ಮಂಡ್ಯ ಜಿಲ್ಲೆಯ ಪಕ್ಷದ ನಾಯಕರು ಹಾಗೂ ಕಾರ್ಯಕರ್ತರ ಅಭಿಪ್ರಾಯವೂ ಆಗಿದೆ’ ಎಂದಿದ್ದಾರೆ.
‘ಎಸ್್.ಎಂ. ಕೃಷ್ಣ ಅವರು ಸುದೀರ್ಘ ರಾಜಕೀಯ ಅನುಭವವನ್ನು ಹೊಂದಿದ್ದಾರೆ. ಮಂಡ್ಯದಿಂದ ಸಂಸದರಾಗಿ, ಶಾಸಕರಾಗಿ ಆಯ್ಕೆಯಾಗಿದ್ದಾರೆ. ರಾಜ್ಯದ ಮುಖ್ಯಮಂತ್ರಿಯಾಗಿಯೂ ಅತ್ಯುತ್ತಮವಾಗಿ ಕೆಲಸ ಮಾಡಿದ್ದಾರೆ. ಅವರು ಅತ್ಯಂತ ಸೂಕ್ತ ಅಭ್ಯರ್ಥಿಯಾಗುತ್ತಾರೆ’ ಎಂದು ಪತ್ರದಲ್ಲಿ ಒತ್ತಿ ಹೇಳಿದ್ದಾರೆ.
‘ಕೃಷ್ಣ ಅವರು ಡೈನಾಮಿಕ್್್ ಹಾಗೂ ಉತ್ತಮ ವರ್ಚಸ್ಸು ಹೊಂದಿದ ನಾಯಕರಾಗಿದ್ದಾರೆ. ಅವರು ಚುನಾವಣೆಗೆ ನಿಂತರೆ ಮುಂದಿನ ಚುನಾವಣೆಯಲ್ಲಿ ರಾಜ್ಯದಲ್ಲಿಯೂ ಪಕ್ಷದ ಗೆಲುವಿಗೆ ನೆರವಾಗಲಿದೆ’ ಎಂದೂ ಅಭಿಪ್ರಾಯಪಟ್ಟಿದ್ದಾರೆ.
‘ಜಿಲ್ಲಾ ಕಾಂಗ್ರೆಸ್ ಸಮಿತಿಯ ಮನವಿಗೆ ಸ್ಪಂದಿಸುತ್ತೀರಿ ಎಂದು ನಂಬಿದ್ದೇನೆ. ಅವರ ನಾಯಕತ್ವದಲ್ಲಿ ಚುನಾವಣೆಯನ್ನು ಎದುರಿಸಿದರೆ ರಾಜ್ಯ ಹಾಗೂ ಜಿಲ್ಲೆಯಲ್ಲಿಯೂ ಪಕ್ಷದಲ್ಲಿ ಒಗ್ಗಟ್ಟನ್ನು ಸಾಧಿಸಲು ಸಾಧ್ಯವಾಗುತ್ತದೆ’ ಎಂದಿದ್ದಾರೆ.
‘ಮಾಜಿ ಮುಖ್ಯಮಂತ್ರಿ ಹಾಗೂ ನಮ್ಮ ನಾಯಕರೂ ಆಗಿರುವ ಕೃಷ್ಣ ಅವರ ಹೆಸರು ಬೆಂಗಳೂರು ಉತ್ತರ ಹಾಗೂ ದಕ್ಷಿಣ ಕ್ಷೇತ್ರದಿಂದ ಕೇಳಿ ಬರುತ್ತಿದೆ. ಅದರ ಬದಲಾಗಿ ಮಂಡ್ಯ ಕ್ಷೇತ್ರಕ್ಕೆ ಟಿಕೆಟ್ ನೀಡಬೇಕು ಎಂದು ಕೆಪಿಸಿಸಿ ಅಧ್ಯಕ್ಷರಿಗೆ ಪತ್ರ ನೀಡಿ ಮನವಿ ಮಾಡಿಕೊಂಡಿದ್ದೇನೆ’ ಎಂದು ಜಿಲ್ಲಾ ಘಟಕದ ಅಧ್ಯಕ್ಷ ಎಂ.ಎಸ್. ಆತ್ಮಾನಂದ ‘ಪ್ರಜಾವಾಣಿ’ಗೆ ತಿಳಿಸಿದರು.
‘ಬೇರೆ ಯಾರಿಗಾದರೂ ಟಿಕೆಟ್ ನೀಡಬೇಕು ಅಥವಾ ನೀಡಬಾರದು ಎಂದೂ ಎಲ್ಲಿಯೂ ಉಲ್ಲೇಖಿಸಿಲ್ಲ. ಕೃಷ್ಣ ಅವರಿಗೆ ಟಿಕೆಟ್ ನೀಡಬೇಕು ಎಂಬ ಮನವಿಗೆ ಯಾವ ನಾಯಕರದ್ದೂ ವಿರೋಧ ಇಲ್ಲ ಎನ್ನುವುದು ನನ್ನ ಭಾವನೆಯಾಗಿದೆ’ ಎಂದು ಹೇಳಿದರು.