ಕುಂದಾಪುರ: ಆಫ್ರಿಕಾದ ಸೆಂಟ್ರಲ್ ಆಫ್ರಿಕನ್ ರಿಪಬ್ಲಿಕ್ ದೇಶದಲ್ಲಿ ಇತ್ತೀಚೆಗೆ ಫ್ರೆಂಚ್ ಸೈನಿಕರ ಗುಂಡಿಗೆ ಬಲಿಯಾದ ಕೃಷ್ಣಯ್ಯ ಮೊಗವೀರ ಅವರ ಬಳ್ಕೂರು ನಿವಾಸಕ್ಕೆ ಎಐಸಿಸಿ ಪ್ರಧಾನ ಕಾರ್ಯದರ್ಶಿ ಆಸ್ಕರ್ ಫರ್ನಾಂಡಿಸ್ ಭಾನುವಾರ ಭೇಟಿ ನೀಡಿ ಸಾಂತ್ವನ ಹೇಳಿದರು.
ನಂತರ ಮಾತನಾಡಿ, ಘಟನೆಯ ಬಗ್ಗೆ ಕೂಲಂಕುಷ ತನಿಖೆ ನಡೆಸುವಂತೆ ಕೇಂದ್ರ ಸರ್ಕಾರ ಅಲ್ಲಿನ ಸರ್ಕಾರಕ್ಕೆ ಮನವಿ ಮಾಡಿದೆ. ಘಟನೆಯಲ್ಲಿ ಸಾವನ್ನಪ್ಪಿದ ಇಬ್ಬರು ಭಾರತೀಯರ ಕುಟುಂಬಕ್ಕೆ ನ್ಯಾಯ ದೊರೆಕಿಸಿ ಕೊಡಲು ಕೇಂದ್ರ ಸರ್ಕಾರ ಬದ್ಧವಾಗಿದ್ದು, ಪ್ರಧಾನಮಂತ್ರಿ ಹಾಗೂ ರಕ್ಷಣಾ ಸಚಿವರು ಘಟನೆಯ ಮಾಹಿತಿ ದೊರೆಕಿದ ಕೂಡಲೇ ಫ್ರಾನ್ಸ್ ಸರ್ಕಾರದ ಪ್ರಮುಖರನ್ನು ಸಂಪರ್ಕಿಸಿ ಮಾತನಾಡಿದ್ದಾರೆ ಎಂದು ತಿಳಿಸಿದರು.
ಪ್ರಸ್ತುತ ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ಸಂತೃಸ್ತ ಕುಟುಂಬಕ್ಕೆ ಪರಿಹಾರದ ಭರವಸೆ ನೀಡುವುದಿಲ್ಲ ಎಂದು ತಿಳಿಸಿದ ಅವರು ನೀತಿ ಸಂಹಿತೆಯ ಪರಿಮಿತಿಯಲ್ಲಿ ಈ ಪ್ರಕರಣದ ಬಗ್ಗೆ ಕೇಂದ್ರ ಹಾಗೂ ರಾಜ್ಯ ಸರ್ಕಾರದ ಸಂಬಂಧಪಟ್ಟ ಸಚಿವಾಲಯ ಹಾಗೂ ಅಧಿಕಾರಿಗಳ ಗಮನ ಸೆಳೆಯಲಾಗುವುದು ಎಂದರು.
ಮೃತ ಕೃಷ್ಣಯ್ಯ ಅವರ ತಂದೆ ನಾರಾಯಣ ಮೊಗವೀರ, ತಾಯಿ, ಪತ್ನಿ ಹಾಗೂ ಸಹೋದರರಿಗೆ ಸಾಂತ್ವನ ಹೇಳಿದ ಅವರು ಘಟನೆಯ ಪ್ರತ್ಯೇಕ್ಷ ಸಾಕ್ಷಿ ಉದಯ್ ಹೊಳ್ಳ ಅವರಿಂದ ಮಾಹಿತಿ ಪಡೆದುಕೊಂಡರು.
ದಕ್ಷಿಣ ಕನ್ನಡ ಕೇಂದ್ರ ಸಹಕಾರಿ ಬ್ಯಾಂಕಿನ ಅಧ್ಯಕ್ಷ ಎಂ.ಎನ್ ರಾಜೇಂದ್ರ ಕುಮಾರ್, ಬ್ಯಾಂಕಿನ ನಿರ್ದೇಶಕ ರಘುರಾಮ ಶೆಟ್ಟಿ ಬಿಜೂರು, ಕುಂದಾಪುರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಲ್ಯಾಡಿ ಶಿವರಾಮ ಶೆಟ್ಟಿ, ಕೆಪಿಸಿಸಿ ಕಾರ್ಯದರ್ಶಿ ಎಂ.ಎ.ಗಫೂರ್, ಕೆಪಿಸಿಸಿ ಸದಸ್ಯ ದಿನೇಶ್ ಪುತ್ರನ್ ಉಡುಪಿ, ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಬಿ ಹೆರಿಯಣ್ಣ, ಜಿಲ್ಲಾ ಪಂಚಾಯಿತಿ ಸದಸ್ಯ ಪ್ರಕಾಶ್ ಟಿ. ಮೆಂಡನ್, ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷೆ ಜ್ಯೋತಿ ವಿ.ಪುತ್ರನ್, ಬಳ್ಕೂರು ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ನಾಗೇಶ್, ಉದ್ಯಮಿ ಕೆ.ಕೆ.ಕಾಂಚನ್, ವಿಜಯ್ ಪುತ್ರನ್ ಹಾಗೂ ಸದಾನಂದ ಬಳ್ಕೂರು ಉಪಸ್ಥಿತರಿದ್ದರು.