ಶಿವಮೊಗ್ಗ: ಕೆಂಪೇಗೌಡರ ಜಯಂತಿಯನ್ನು ರಾಜ್ಯದ ಆಚರಣೆಯನ್ನಾಗಿ ಮಾಡುವ ಕುರಿತು ಸದ್ಯದಲ್ಲೇ ಸರ್ಕಾರಿ ಆದೇಶ ಹೊರಡಿಸಲಾಗುವುದು ಎಂದು ಮುಖ್ಯಮಂತ್ರಿ ಡಿ.ವಿ. ಸದಾನಂದಗೌಡ ಘೋಷಿಸಿದರು.
ನಗರದ ಆದಿ ಚುಂಚನಗಿರಿ ಸಮುದಾಯ ಭವನದಲ್ಲಿ ಜಿಲ್ಲಾ ಒಕ್ಕಲಿಗರ ಸಂಘ ಬುಧವಾರ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಅಭಿನಂದನೆ ಸ್ವೀಕರಿಸಿ ಅವರು ಮಾತನಾಡಿದರು.
ಕಾರ್ಯಕ್ರಮದಲ್ಲಿ ಕೆಂಪೇಗೌಡರ ಜಯಂತಿಯನ್ನು ಸರ್ಕಾರದ ಆಚರಣೆಯಾಗಿ ಘೋಷಣೆ ಮಾಡುವಂತೆ ಮನವಿ ಬಂದ ಹಿನ್ನೆಲೆಯಲ್ಲಿ ಅವರು ಈ ನಿರ್ಧಾರ ಪ್ರಕಟಿಸಿದರು.
ಬೆಂಗಳೂರಿನ ದೇವನಹಳ್ಳಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಕೆಂಪೇಗೌಡರ ಹೆಸರನ್ನು ಇಡುವ ಬಗ್ಗೆ ಸಂಘದಿಂದ ಆಗ್ರಹವಿದೆ. ಈ ಬಗ್ಗೆ ಕೇಂದ್ರಕ್ಕೆ ಪ್ರಸ್ತಾವ ಸಲ್ಲಿಸಲಾಗುವುದು. ಈ ಸಂಬಂಧ ಎಲ್ಲಾ ಸಿದ್ಧತೆಗಳನ್ನು ನಡೆಸಲಾಗಿದೆ ಎಂದರು.
`ಮುಖ್ಯಮಂತ್ರಿಯಾಗಿ ವಿಶೇಷ ಜವಾಬ್ದಾರಿ ನನ್ನ ಮೇಲಿದೆ. ನಾಡು ಕಟ್ಟಿದ ಕೆಂಪೇಗೌಡರ ಮಾರ್ಗದರ್ಶನ ಹಾಗೂ ತತ್ವ-ಆದರ್ಶದಂತೆ ಸಮಾಜಕ್ಕೆ ಕೆಟ್ಟ ಹೆಸರು ಬಾರದ ರೀತಿ ಗೌರವದಿಂದ ಆಡಳಿತ ನಡೆಸುತ್ತೇನೆ~ ಎಂದರು.