ಬೆಳಗಾವಿ: ‘ರೈತರಿಗೆ ಅನುಕೂಲ ಮಾಡಿಕೊಡುವ ಉದ್ದೇಶದಿಂದ ಕೃಷಿ ರಫ್ತು ನೀತಿಯನ್ನು ಸಡಿಗೊಳಿಸಲು ಕೇಂದ್ರ ಸರ್ಕಾರ ನಿರ್ಧರಿಸಿದೆ’ ಎಂದು ಕೇಂದ್ರ ಕೃಷಿ ಸಚಿವ ಶರದ್ ಪವಾರ್ ಶನಿವಾರ ಇಲ್ಲಿ ತಿಳಿಸಿದರು.ಕೆಎಲ್ಇ ಸಂಸ್ಥೆಯ ವತಿಯಿಂದ ನಿರ್ಮಿಸಲು ಉದ್ದೇಶಿಸಿರುವ ಅತ್ಯಾಧುನಿಕ ಕ್ಯಾನ್ಸರ್ ಆಸ್ಪತ್ರೆಗೆ ಭೂಮಿ ಪೂಜೆ ನೆರವೇರಿಸಿ ಮಾತನಾಡುತ್ತಿದ್ದರು.
‘ಕೃಷಿಕನ ಬಾಳು ಸುಧಾರಿಸಬೇಕು. ಜತೆಗೆ ಕೃಷಿಗೆ ಸಂಬಂಧಿಸಿದ ಉದ್ದಿಮೆಗಳು ಬೆಳೆಯಬೇಕು ಎಂಬ ಉದ್ದೇಶದಿಂದ ರಫ್ತು ನೀತಿ ಸಡಿಲಗೊಳಿಲು ಉದ್ದೇಶಿಸಲಾಗಿದೆ’ ಎಂದರು.
‘ಆಹಾರ ಭದ್ರತಾ ಕಾಯ್ದೆಯನ್ನು ಜಾರಿಗೆ ತರಲು ಕೇಂದ್ರ ಸರ್ಕಾರ ಬದ್ಧವಾಗಿದೆ. ಈ ಕಾನೂನಿನ ರೂಪು, ರೇಷೆಗಳನ್ನು ಸಿದ್ಧಗೊಳಿಸಲಾಗುತ್ತಿದೆ’ ಎಂದು ಶರದ್ ಪವಾರ್ ಹೇಳಿದರು.
ಕೆಎಲ್ಇ ಸಂಸ್ಥೆಯ ಕಾರ್ಯಾಧ್ಯಕ್ಷ ಹಾಗೂ ರಾಜ್ಯಸಭಾ ಸದಸ್ಯ ಡಾ. ಪ್ರಭಾಕರ ಕೋರೆ, ಉಸ್ತುವಾರಿ ಸಚಿವ ಉಮೇಶ ಕತ್ತಿ, ಸಂಸದ ಸುರೇಶ ಅಂಗಡಿ, ಮಾಜಿ ಸಚಿವ ಆರ್.ವಿ.ದೇಶಪಾಂಡೆ ಮತ್ತಿತರರು ಉಪಸ್ಥಿತರಿದ್ದರು. ಕೆಎಲ್ಇ ಅಧ್ಯಕ್ಷ ಶಿವಾನಂದ ಕೌಜಲಗಿ ಅಧ್ಯಕ್ಷತೆ ವಹಿಸಿದ್ದರು. ಡಾ. ಸುಜಾತಾ ಜಾಲಿ ವಂದಿಸಿದರು.ಆಸ್ಪತ್ರೆ 52 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗಲಿದ್ದು, 2012ರ ಒಳಗೆ ಪೂರ್ಣಗೊಳ್ಳಲಿದೆ.