ಬೆಂಗಳೂರು: 2011ನೇ ಸಾಲಿನ ಗೆಜೆಟೆಡ್ ಪ್ರೊಬೇಷನರಿ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಮರು ಮೌಲ್ಯಮಾಪನ ಮತ್ತು ಮರು ಸಂದರ್ಶನ ನಡೆಸಲು ಸರ್ಕಾರ ಹೊರಡಿಸಿರುವ ಆದೇಶ ಪ್ರಶ್ನಿಸಿ ಚಂದನ್ ಕುಮಾರ್ ಮತ್ತು ಇತರರು ಕರ್ನಾಟಕ ಆಡಳಿತ ನ್ಯಾಯಮಂಡಳಿ (ಕೆಎಟಿ) ಮೆಟ್ಟಿಲೇರಿದ್ದಾರೆ.
ಈ ಪ್ರಕರಣದ ವಿಚಾರಣೆ ನಡೆಸಿದ ಕೆಎಟಿ, ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಗೆ ನೋಟಿಸ್ ಜಾರಿಗೆ ಆದೇಶಿಸಿದ್ದು, ಮುಂದಿನ ವಿಚಾರಣೆಯನ್ನು ಜ. 21ಕ್ಕೆ ನಿಗದಿಪಡಿಸಿದೆ.
‘ಕರ್ನಾಟಕ ಲೋಕಸೇವಾ ಆಯೋಗ ನಡೆಸಿದ ಪರೀಕ್ಷೆಗೆ ಹಾಜರಾಗಿದ್ದ ನಾವು ಉತ್ತಮ ಅಂಕ ಗಳಿಸಿದ್ದೇವೆ. ಆಯ್ಕೆ ಪಟ್ಟಿ ಪ್ರಕಟಣೆಯ ನಿರೀಕ್ಷೆಯಲ್ಲಿದ್ದೇವೆ. ಆದರೆ ನೇಮಕಾತಿ ಪ್ರಕ್ರಿಯೆ-ಯಲ್ಲಿ ಅಕ್ರಮ ನಡೆದಿದೆ ಎಂದು ಡಾ. ಮೈತ್ರಿ ಎಂಬುವರು ರಾಜ್ಯದ ಅಡ್ವೊಕೇಟ್ ಜನರಲ್ಗೆ ದೂರು ನೀಡಿದರು’ ಎಂದು ಅರ್ಜಿಯಲ್ಲಿ ವಿವರಿಸಲಾಗಿದೆ.
‘ದೂರು ಪಡೆದ ಅಡ್ವೊಕೇಟ್ ಜನರಲ್, ಸರ್ಕಾರಕ್ಕೆ ಕೆಲವು ಸಲಹೆ ನೀಡಿದರು. ಇದನ್ನು ಆಧರಿಸಿ, ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಸಿಐಡಿ ತನಿಖೆಗೆ ಆದೇಶಿಸಿತು. ನೇಮಕಾತಿ ಪ್ರಕ್ರಿಯೆಯಲ್ಲಿ ಅವ್ಯವಹಾರ ನಡೆದಿದೆ ಎಂದು ಸಿಐಡಿ ಮಧ್ಯಂತರ ವರದಿ ನೀಡಿತು. ಇದರ ಆಧಾರದ ಮೇಲೆ ಮರು ಮೌಲ್ಯಮಾಪನ– ಮರು ಸಂದರ್ಶನ ನಡೆಸಲು ತೀರ್ಮಾನಿಸಲಾಗಿದೆ. ಮರು ಸಂದರ್ಶನದ ನಿರ್ಧಾರದಿಂದ, ಸರ್ಕಾರಿ ಸೇವೆಗೆ ಸೇರುವ ನಮ್ಮ ಕನಸುಗಳು ಚೂರಾಗಿವೆ’ ಎಂದು ಅರ್ಜಿದಾರರು ಅಳಲು ತೋಡಿಕೊಂಡಿದ್ದಾರೆ.