ಶ್ರೀನಿವಾಸಪುರ: ಸಮಾಜದ ಹಿತದೃಷ್ಟಿಯಿಂದ ಕೆರೆಗಳನ್ನು ಒತ್ತುವರಿ ಮಾಡಿಕೊಂಡಿರುವವರು ಸ್ವಯಂ ಪ್ರೇರಣೆಯಿಂದ ತೆರವುಗೊಳಿಸಬೇಕು ಎಂದು ಶಾಸಕ ಜಿ.ಕೆ.ವೆಂಕಟಶಿವಾರೆಡ್ಡಿ ಹೇಳಿದರು.ತಾಲ್ಲೂಕಿನ ಯದರೂರು ಗ್ರಾಮದ ದೊಡ್ಡಕೆರೆ ಮೈದಾನದಲ್ಲಿ ಶುಕ್ರವಾರ ಏರ್ಪಡಿಸಲಾಗಿದ್ದ ಸಮಾರಂಭದಲ್ಲಿ 1 ಕೋಟಿ ರೂ. ವೆಚ್ಚದಲ್ಲಿ ಕೈಗೊಳ್ಳಲಾಗುವ ಕೆರೆ ಅಭಿವೃದ್ಧಿ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿ ಮಾತನಾಡಿದರು.
ಕೆರೆಗಳ ಒತ್ತುವರಿಯಿಂದಾಗಿ ಹೂಳಿನ ಪ್ರಮಾಣ ಹೆಚ್ಚಿ ನೀರನ್ನು ಹಿಡಿದಿಟ್ಟುಕೊಳ್ಳುವ ಪ್ರಮಾಣ ಕಡಿಮೆಯಾಗಿದೆ. ಇದರಿಂದ ಅಂತರ್ಜಲ ಕುಸಿದು ಕುಡಿಯುವ ನೀರಿಗೆ ಬರ ಬಂದಿದೆ ಎಂದು ಹೇಳಿದರು. ಕೆರೆಯ ವಿಸ್ತೀರ್ಣ 360 ಹೆಕ್ಟೇರ್ ಇದೆ. ಸಣ್ಣ ನೀರಾವರಿ ಇಲಾಖೆ ಅಭಿವೃದ್ಧಿಪಡಿಸುತ್ತಿದೆ. ಕಾಮಗಾರಿ ಪೂರ್ಣಗೊಂಡಾಗ ಸುತ್ತಲಿನ ಹಲವು ಹಳ್ಳಿಗಳಿಗೆ ಅನುಕೂಲವಾಗಲಿದೆ.
ಬರುವ ಮುಂಗಾರಿನ ವೇಳೆಗೆ ಕಾಮಗಾರಿಯನ್ನು ಪೂರ್ಣಗೊಳಿಸಬೇಕೆಂದು ಹೇಳಿದರು. ಜಿ.ಪಂ. ಮಾಜಿ ಅಧ್ಯಕ್ಷ ಎಂ.ಶ್ರೀನಿವಾಸನ್, ಸದಸ್ಯ ತೂಪಲ್ಲಿ ಆರ್.ನಾರಾಯಣಸ್ವಾಮಿ, ಗುತ್ತಿಗೆದಾರ ಕೃಷ್ಣಾರೆಡ್ಡಿ, ಮುಖಂಡರಾದ ಶ್ರೀನಿವಾಸರೆಡ್ಡಿ, ಲಕ್ಷ್ಮೀಪುರ ಜಗದೀಶ್, ಯಲ್ದೂರು ಮಣಿ, ಕೋಟಬಲ್ಲಪ್ಪಲ್ಲಿ ಅರುಣ್ ಕುಮಾರ್, ತಾ.ಪಂ. ಮಾಜಿ ಸದಸ್ಯ ರಾಜಶೇಖರರೆಡ್ಡಿ, ಗಾಜಲಪಲ್ಲಿ ಚಂದ್ರಪ್ಪ, ರಾಮಚಂದ್ರಾರೆಡ್ಡಿ, ಉದಯ ಶಂಕರ್ ಮತ್ತಿತರರು ಉಪಸ್ಥಿತರಿದ್ದರು.